ಬಿ.ಕೆ.ಹರಿಪ್ರಸಾದ್ ರಿಗೆ ಗೃಹಖಾತೆ ಸೂಕ್ತ: ಅಭಯಚಂದ್ರ ಜೈನ್
ಮಂಗಳೂರು, ಮೇ 19: ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟದಲ್ಲಿ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿರುವ ಬಿ.ಕೆ.ಹರಿಪ್ರಸಾದ್ ಗೃಹ ಸಚಿವರಾಗಲು ಸೂಕ್ತ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅಭಿಪ್ರಾಯಿಸಿದ್ದಾರೆ.
ಕದ್ರಿ-ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಹುತೇಕ ಕಡೆ ಜಯ ಗಳಿಸಿದ್ದರೂ ಕರಾವಳಿಯಲ್ಲಿ ಹಿನ್ನಡೆ ಅನುಭವಿಸಿದೆ. ಈ ಹಿಂದೆ ಆಸ್ಕರ್ ಫೆರ್ನಾಂಡಿಸ್, ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿ ಸಕ್ರಿಯವಾಗಿದ್ದಾಗ ನಾಯಕರ ಕೊರತೆ ಇರಲಿಲ್ಲ. ಈ ಕೊರತೆ ನೀಗಿಸಲು ಬಿ.ಕೆ.ಹರಿಪ್ರಸಾದ್ ರಾಜ್ಯದ ಗೃಹ ಸಚಿವರಾಗುವುದು ಅಗತ್ಯವಿದೆ ಎಂದರು.
ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿಯೂ ಹರಿಪ್ರಸಾದ್ ರನ್ನು ನೇಮಕ ಮಾಡುವುದು ಸೂಕ್ತ. ಇದರಿಂದ ಜಿಲ್ಲೆಯಲ್ಲಿ ಸಾಮರಸ್ಯದೊಂದಿಗೆ ಅಭಿವೃದ್ಧಿ ಸಾಧ್ಯ ಎಂದು ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ನೂತನ ಸರ್ಕಾರಕ್ಕೆ ಜನರಿಗೆ ನೀಡಿರುವ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ
ಮಾಡುವ ಹೊಣೆಗಾರಿಕೆ ಇದೆ. ಅದನ್ನು ಸಮರ್ಪಕವಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ಯುವಕರಿಗೆ ಅವಕಾಶ ನೀಡಬೇಕು. ಈ ಹಿನ್ನಲೆಯಲ್ಲಿ ನಾನು ವಿಧಾನ ಪರಿಷತ್ ಸದಸ್ಯತ್ವದ ಆಕಾಂಕ್ಷಿಯಲ್ಲ. ಆದರೆ ಮೂಡುಬಿದಿರೆ ಕ್ಷೇತ್ರದಲ್ಲಿ ಪರಾಜಿತರಾಗಿರುವ ಮಿಥುನ್ ರೈಯವರಿಗೆ ವಿಧಾನ ಪರಿಷತ್ ಸದಸ್ಯ ತ್ವ ನೀಡಬಹುದು ಎಂದು ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿರುವ ಯು.ಟಿ.ಖಾದರ್ ಗೆ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆ ನೀಡಬೇಕು. ರಮಾನಾಥ ರೈಯವರಿಗೆ ಖಾತೆ ನೀಡಿದರೂ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.
*ಕಲ್ಲಡ್ಕ ಪ್ರಭಾಕರ ಭಟ್, ನಳಿನ್ ಕುಮಾರ್ ನೇರ ಹೊಣೆ:
ಪುತ್ತೂರಿನಲ್ಲಿ ನಳಿನ್ ಕುಮಾರ್ ಕಟೀಲು ಹಾಗೂ ಡಿ.ವಿ.ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಆರೋಪದಲ್ಲಿ ಬಂಧಿತ ಯುವಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ನೇರ ಹೊಣೆ ಎಂದು ಅಭಯಚಂದ್ರ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಸವರಾ ಬೊಮ್ಮಾಯಿ ಹಂಗಾಮಿ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವಾಗ ಈ ಘಟನೆ ನಡೆದಿದೆ. ಅದಾಗ್ಯೂ ಕಲ್ಲಡ್ಕ ಪ್ರಭಾಕರ ಭಟ್ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿರುವದು ಖಂಡನೀಯ ಎಂದು ಅಭಯಚಂದ್ರ ಜೈನ್ ಹೇಳಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಶುಭೋದಯ ಆಳ್ವ, ನೀರಜ್ ಪಾಲ್ ಮೊದಲಾದವರು ಉಪಸ್ಥಿತರಿದ್ದರು.