ನೂತನ ಸರಕಾರ ಶಿಕ್ಷಣವನ್ನು ಬಲಗೊಳಿಸಲಿ: ನಿರಂಜನಾರಾಧ್ಯ ವಿ.ಪಿ. ಆಗ್ರಹ
ಬೆಂಗಳೂರು, ಮೇ 19: ಶಾಲೆ ಪ್ರಾರಂಭವಾಗಲು ಕೇವಲ 10 ದಿನಗಳು ಮಾತ್ರ ಬಾಕಿ ಇದ್ದು, ನೂತನ ಸರಕಾರ ಶಿಕ್ಷಣದ ವಿಷಯವನ್ನು ಅತ್ಯಂತ ಜರೂರಿನ ವಿಷಯವನ್ನಾಗಿ ಪರಿಗಣಿಸಿ, ಎಲ್ಲ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಮತ್ತು ಸಮನ್ವಯ ವೇದಿಕೆಯ ಸಂಸ್ಥಾಪಕ ಪೋಷಕ, ಶಿಕ್ಷಣತಜ್ಞ ನಿರಂಜನಾರಾಧ್ಯ ವಿ.ಪಿ. ಆಗ್ರಹಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ. 13,352 ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಶಾಲೆ ಪ್ರಾರಂಭವಾಗುವ ಮುನ್ನ ಅವರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸರಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ, ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕವಾಗಬೇಕು. ಬಾಕಿ ಖಾಲಿ ಉಳಿಯುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಜೂನ್ 15ರ ಒಳಗಾಗಿ ನೇಮಿಸಿಕೊಳ್ಳಲು ಯುದ್ಧೋಪಾದಿಯಲ್ಲಿ ಕ್ರಮ ವಹಿಸುವುದು. ಈ ಪ್ರಕ್ರಿಯೆಯನ್ನು ಎಸ್ಡಿಎಂಸಿ ವ್ಯಾಪ್ತಿ ಹಾಗು ವಿವೇಚನೆಗೆ ಬಿಡಬೇಕು ಎಂದು ತಿಳಿಸಿದ್ದಾರೆ.
ಶಾಲಾ ಪ್ರಾರಂಭಕ್ಕೆ ಮುನ್ನ ಎಲ್ಲ್ಲ ಮಕ್ಕಳಿಗೆ ದೊರೆಯಬೇಕಾದ ಉತ್ತೇಜಕಗಳಾದ ಪಠ್ಯಪುಸ್ತಕ, ಸಮವಸ್ತ್ರ, ಷೂ ಮತ್ತು ಸಾಕ್ಸ್ಗಳನ್ನು ಸಕಾಲಕ್ಕೆ ಒದಗಿಸಬೇಕು. ಶಾಲಾ ಹಂತದಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಸರಕಾರಿ ಹಾಗು ಅನುದಾನಿತ ಶಾಲೆಗಳಲ್ಲಿ 1 ರಿಂದ 12ನೆ ತರಗತಿಯವರೆಗೆ ಕಲಿಯುತ್ತಿರುವ ಎಲ್ಲ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ತಿಳಿಸಿದ್ದಾರೆ.
ಮೂರ್ನಾಲ್ಕು ವರ್ಷಗಳಿಂದ ಶಾಲಾ ಅನುದಾನಗಳು ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾಗುತ್ತಿಲ್ಲ. ತಕ್ಷಣ ಶಾಲಾ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ಸರಕಾರಿ ಶಾಲೆಗಳಲ್ಲಿ ಬಳಸುವ ವಿದ್ಯುಚ್ಛಕ್ತಿ ಹಾಗು ನೀರಿನ ಬಳಕೆಯ ಬಿಲ್ ಗಳ ಹಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡಬೇಕು ಎಂದು ತಿಳಿಸಿದ್ದಾರೆ.
ಪ್ರೌಢ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್ ವಿತರಣೆಯನ್ನು ನಾಲ್ಕು ವರ್ಷಗಳಿಂದ ಸ್ಥಗಿತಗೊಳಿಸಿದ್ದು, ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆದುದರಿಂದ, ಕೂಡಲೇ ಮಕ್ಕಳಿಗೆ ಬೈಸಿಕಲ್ ವಿತರಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು. ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜೂನ್ ಒಂದರ ಒಳಗೆ ಎಲ್ಲ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಪುನರಾರಂಭಗೊಳ್ಳುವಂತೆ ಜರೂರು ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಪ್ರಥಮ ಆದ್ಯತೆಯಾಗಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಚಿತ ಊಟ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಯಾವುದೇ ನೆಪಹೇಳಿ ಸರಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ಪೂರ್ಣವಾಗಿ ನಿಲ್ಲಿಸಬೇಕು. ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗು ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಖಾಸಗಿ ಸ್ವಾಯತ್ತ ವಿಶ್ವ ವಿದ್ಯಾಲಯಗಳನ್ನು ಅಣಬೆಯಂತೆ ತೆರೆಯಲು ನೀಡುವ ಅನುಮತಿಯನ್ನು ಸ್ಥಗಿತಗೊಳಿಸಿ, ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇಕಡ 20ರಷ್ಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಷ್ಟ್ರೀಯತೆಯ ಹೆಸರಿನಲ್ಲಿ ಮಕ್ಕಳಿಗೆ ವಿಷ ಉಣಿಸುವ ಕೆಲಸ:
‘ಹಿಂದಿನ ಬಿಜೆಪಿ ಸರಕಾರವು ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುವ ಮೂಲಕ ಹಾಳು ಮಾಡಿದ್ದಲ್ಲದೆ, ಸಾಕಷ್ಟು ಗೊಂದಲ ಸೃಷ್ಟಿಸಿದೆ. ಪೊಳ್ಳು ರಾಷ್ಟ್ರೀಯತೆಯ ಹೆಸರಿನಲ್ಲಿ ಮಕ್ಕಳಿಗೆ ವಿಷ ಉಣಿಸುವ ಕೆಲಸವನ್ನು ಮಾಡಿದೆ. ಒಂದು ರೀತಿಯಲ್ಲಿ ಶಿಕ್ಷಣದ ಪ್ರಕ್ರಿಯೆಯನ್ನೇ ಸರ್ವನಾಶ ಮಾಡಿದ್ದಾರೆ. ಬಡ ಮಕ್ಕಳಿಗೆ ಸಿಗುತ್ತಿದ್ದ ಹಲವು ಸಂವಿಧಾನಬದ್ಧ ಉತ್ತೇಜಕಗಳನ್ನು ಕಸಿದು, ಸರಕಾರಿ ಶಾಲೆಗಳನ್ನು ದುರ್ಬಲಗೊಳಿಸದ್ದಾರೆ. ಇದರಲ್ಲಿ ಹಲವು ಅಧಿಕಾರಿಗಳ ಪಾತ್ರವೂ ಇದೆ ಎಂಬುದು ಗಮನಿಸಬೇಕಾದ ಸಂಗತಿ’
-ನಿರಂಜನಾರಾಧ್ಯ ವಿ.ಪಿ., ಶಿಕ್ಷಣತಜ್ಞ
----------------------------------------
ಪಠ್ಯಪರಿಷ್ಕರಣೆ ಮಾಡಿದವರ ವಿರುದ್ಧ ಕ್ರಮ ಜರುಗಲಿ: ‘ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಮತ್ತು ಸೂಕ್ತ ಆದೇಶವೇ ಇಲ್ಲದೆ ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಖಜಾನೆಗೆ ಕೋಟ್ಯಂತರ ರೂ.ನಷ್ಟ ಮಾಡಿದ ಹಿಂದಿನ ಪಠ್ಯಪರಿಷ್ಕರಣೆ ಸಮಿತಿಯ ಅಧ್ಯಕ್ಷರು ಮತ್ತು ತಂಡದ ಸದಸ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ, ಲಕ್ಷ ಲಕ್ಷ ಸಂಖ್ಯೆಯಲ್ಲಿ ಮುದ್ರಣವಾಗಿದ್ದ ಕನ್ನಡ ಹಾಗೂ ಇತಿಹಾಸದ ಪುಸ್ತಕಗಳ ಸರಬರಾಜನ್ನು ಸ್ಥಗಿತಗೊಳಿಸುವ ಮೂಲಕ ಪೋಲು ಮಾಡಿದ ಕೋಟ್ಯಂತರ ರೂ. ಸಾರ್ವಜನಿಕ ಹಣವನ್ನು ಅವರಿಂದ ವಸೂಲು ಮಾಡಬೇಕು’
-ನಿರಂಜನಾರಾಧ್ಯ ವಿ.ಪಿ., ಶಿಕ್ಷಣತಜ್ಞ