ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಎಂ.ಬಿ. ಪಾಟೀಲ್

Update: 2023-05-22 17:22 GMT

ಮೈಸೂರು: 'ರಾಜ್ಯದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ' ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಜಿಲ್ಲೆಯ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಸೋಮವಾರ ಭೇಟಿಯಾಗಿ ಆಶೀರ್ವಾದ ಪಡೆದು ಕೆಲಹೊತ್ತು ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದ ಅವರು, 'ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದರು. 

‘ಗ್ಯಾರಂಟಿಗಳನ್ನು ಜಾರಿಗೊಳಿಸಿಯೇ ತೀರುತ್ತೇವೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ’ ಎಂದು ಇದೇ ವೇಳೆ ತಿಳಿಸಿದರು.

 ''ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ''

'ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್​ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ. ಪ್ರತಿಯೊಂದು ಹಗರಣಗಳನ್ನೂ ಬಯಲಿಗೆಳೆಯುತ್ತೇವೆ. ಈ ಮೂಲಕ ತಪ್ಪಿಸ್ಥರನ್ನು ಶಿಕ್ಷೆಗೊಳಪಡಿಸಿ, ನೊಂದವರಿಗೆ ನ್ಯಾಯ ಕೊಡಿಸುತ್ತೇವೆ' ಎಂದರು.

Similar News