ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

Update: 2023-05-25 04:23 GMT

ಬೆಂಗಳೂರು, ಮೇ 24: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ಬುಧವಾರ ರಾಜಿನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ.

ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದರು. 

ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಇತ್ತು. ಇದರ ಲಾಭವನ್ನು ಕಾಂಗ್ರೆಸ್‍ನವರು ಪಡೆದಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ. ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರೂ ನಾವು 60 ಲಕ್ಷ ಮತ ಪಡೆದಿದ್ದೇವೆ ಎಂದರು.

ಲೋಕಸಭೆ ಚುನಾವಣೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಒಟ್ಟಾಗಿ ಕೆಲಸ ಪ್ರಾರಂಭಿಸುತ್ತೇವೆ. ನೂತನ ಮುಖ್ಯಮಂತ್ರಿಗೆ ಒಳ್ಳೆಯದಾಗಲಿ ಎಂದರು. 

Similar News