ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು: ನೂತನ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

''ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ''

Update: 2023-05-24 14:56 GMT

ಬೆಂಗಳೂರು, ಮೇ 24: ರಾಜ್ಯದ ಜನತೆ ಅಪಾರ ನಿರೀಕ್ಷೆಗಳೊಂದಿಗೆ ನಮಗೆ ಅಪಾರ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. ಐದು ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ ಎಂದು ನೂತನ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. 

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ 16ನೆ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಶುಭ ಹಾರೈಸಿ ಅವರು ಮಾತನಾಡಿದರು.

ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ. ಬಿಜೆಪಿಯವರು ಮಾಡುವ ಸುಳ್ಳು ಅಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು. ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ ಎಂದು ಅವರು ಹೇಳಿದರು.

ನಮ್ಮ ನಾಡಿನ ಜನತೆ ಕಟ್ಟುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು. ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸೂಚಿಸಿದರು.

Similar News