×
Ad

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿ ಖುಲಾಸೆ ಆದೇಶ ರದ್ದು

Update: 2023-05-24 21:57 IST

ಬೆಂಗಳೂರು, ಮೇ 24: ಅಪ್ರಾಪ್ತೆಯಾಗಿದ್ದ ಸೋದರ ಸಂಬಂಧಿ ಮೇಲೆ ಅತ್ಯಾಚಾರವೆಸಗಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. 

ಮಡಿಕೇರಿಯ ಮಡೆ ಗ್ರಾಮದ ವಿಜಯ ಎಂಬುವರನ್ನು ಕೊಡಗಿನ 3ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. 

ಸುಪ್ರೀಂಕೋರ್ಟ್ ಆದೇಶದ ಅನ್ವಯ ರೂಪಿಸಲಾಗಿರುವ ನಿಯಮಗಳಿಗೆ ಪೂರಕವಾಗಿ ದಾಖಲೆಯಲ್ಲಿರುವ ಸಾಕ್ಷ್ಯಗಳನ್ನು ವಿಚಾರಣಾಧೀನ ನ್ಯಾಯಾಲಯ ಪರಿಗಣಿಸದೇ ಆರೋಪಿಯನ್ನು ಖುಲಾಸೆಗೊಳಿಸುವ ಮೂಲಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ. ನಿಷಿದ್ಧವಾಗಿರುವ 15 ವರ್ಷದ ತನ್ನ ಸೋದರ ಸಂಬಂಧಿಯ ಜತೆ ಸಂಭೋಗ ನಡೆಸುವುದಲ್ಲದೇ ಆಕೆಗೆ ವಂಚಿಸಿರುವುದನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯ ವಿಫಲವಾಗಿದೆ. ಹೀಗಾಗಿ ಆರೋಪಿಯನ್ನು ಖುಲಾಸೆ ಮಾಡಿರುವ ಆದೇಶ ನ್ಯಾಯದಾನಕ್ಕೆ ಮಾರಕವಾಗಿದ್ದು, ಅದನ್ನು ರದ್ದುಪಡಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?: ಸಂತ್ರಸ್ತೆ 1992ರ ಫೆ.29 ರಂದು ಜನಿಸಿದ್ದು, ಆರೋಪಿ ಆಕೆಯ ಚಿಕ್ಕಪ್ಪನ ಮಗನಾಗಿದ್ದಾನೆ. ಆರೋಪಿಯ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸಿದ್ದ. ಇದರಿಂದ ಆಕೆ ಗರ್ಭಿಣಿಯಾಗಿದ್ದು, ವಿಚಾರ ಪೋಷಕರ ಗಮನಕ್ಕೆ ಬಂದಿತ್ತು. 

ಮಗುವನ್ನು ತೆಗೆಸಿದರೆ ಮದುವೆಯಾಗುವುದಾಗಿ ಆತ ಷರತ್ತು ವಿಧಿಸಿದ್ದ. ಊರಿನವರ ಪಂಚಾಯಿತಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ತಿಳಿಸಿದ್ದ ಆರೋಪಿ ಬಳಿಕ ನಾಪತ್ತೆಯಾಗಿದ್ದ. ಹೀಗಾಗಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ನಡುವೆ ಸಂತ್ರಸ್ತೆಗೆ ವಿವಾದಿತ ಸಂಬಂಧದಲ್ಲಿ ಹೆಣ್ಣು ಮಗು ಜನಿಸಿತ್ತು. ಆಕೆ ಆನಂತರ ಮತ್ತೊಂದು ಮದುವೆಯಾಗಿದ್ದರು. ಈ ಸಂಬಂಧದಿಂದ ಮತ್ತೊಂದು ಮಗು ಪಡೆದಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಸಂತ್ರಸ್ತೆಯ ವಯಸ್ಸು ಸಾಬೀತಾಗಿಲ್ಲ. ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ಸಂಬಂಧ ಒಪ್ಪಿತವಾಗಿತ್ತು. ಆರೋಪಿ ಸಂತ್ರಸ್ತೆಯ ಜತೆಗೆ ಹೊಂದಿದ್ದ ಸಂಭೋಗದಿಂದ ಆಕೆ ಗರ್ಭಿಣಿಯಾಗಿದ್ದಳು ಎನ್ನುವುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಂಶವಾಹಿ ಪರೀಕ್ಷೆ ವರದಿ ಸಲ್ಲಿಸಿಲ್ಲ ಎಂದು ಕಾರಣಗಳನ್ನು ನೀಡಿ, ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

Similar News