ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧದ ಪ್ರಕರಣ ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

Update: 2023-05-26 07:11 GMT

ಮೈಸೂರು: ಮಾಜಿ ಸಚಿವ, ಶಾಸಕ ಡಾ.ಅಶ್ವತ್ಥನಾರಾಯಣ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಫೆ.15ರಂದು ಮಂಡ್ಯದ ಸಾತನೂರು ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಸಾರ್ವಜನಿಕವಾಗಿ ''ಉರಿಗೌಡ ಮತ್ತು ನಂಜೇಗೌಡ ಟಿಪ್ಪು ಸುಲ್ತಾನ್ ನನ್ನು ಕೊಂದ ಹಾಗೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು'' ಎಂಬ ಹೇಳಿಕೆ ನೀಡಿದ್ದರು. ಹಾಗಾಗಿ ಸಿದ್ದರಾಮಯ್ಯಗೆ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಮೇ 24 ರಂದು ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ದೇವರಾಜ ಪೊಲೀಸರು ಐಪಿಸಿ 506 ಹಾಗೂ 153 ರಡಿ ಪ್ರಕರಣ ದಾಖಲಿಸಿದ್ದರು. ದೇವರಾಜ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಸೂಚನೆ ಮೇರೆಗೆ ಪಿ.ಎಸ್.ಐ.‌ಜಯಕೀರ್ತಿ ಸ್ಥಳ ಪರಿಶೀಲನೆ ನಡೆಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

Similar News