ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ: ಹೈಕೋರ್ಟ್ ಮೆಟ್ಟಿಲೇರಿದ ಡಿಸಿಎಂ ಡಿಕೆಶಿ

Update: 2023-05-27 12:09 GMT

ಬೆಂಗಳೂರು, ಮೇ 27: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಒತ್ತಾಯಿಸಿ ನಡೆದ ಪಾದಯಾತ್ರೆಯಲ್ಲಿ ಕೊರೋನ-19 ನಿಯಮಗಳ ಉಲ್ಲಂಘನೆ ಮತ್ತು ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣಗಳ ರದ್ದು ಕೋರಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಡಿಕೆಶಿ ಅವರು ತಮ್ಮ ವಿರುದ್ಧ ದಾಖಲಾಗಿರುವ 8 ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಅರ್ಜಿಗಳಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಒಂದು ವಾರ ಮುಂದೂಡಿದೆ.

ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಬೇಕಾಗಿದ್ದು, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಒಂದು ವಾರ ಮಾತ್ರ ಮುಂದೂಡಲಾಗುವುದು. ಅಷ್ಟರಲ್ಲಿ ಎಲ್ಲ ಆಕ್ಷೇಪಣೆಗಳನ್ನು ಸರಿಪಡಿಸಬೇಕು ಎಂದು ತಿಳಿಸಿದೆ.

ಪ್ರಕರಣವೇನು?: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ 2022ರ ಜ.9 ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್ ಸೇರಿದಂತೆ ಸರಕಾರದ ಅಧಿಕಾರಿಗಳು ರಾಮನಗರ ಗ್ರಾಮೀಣ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ದೂರು ಸಲ್ಲಿಸಿದ್ದರು. 

ಈ ಸಂಬಂಧ ಫೆಬ್ರವರಿ 9ರಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಜನಪ್ರತಿನಿಧಿಗಳಿಗೆ ಸಂಬಂಧಿಸಿದ್ದ ಪ್ರಕರಣವಾದ್ದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಪ್ರಕರಣಗಳನ್ನು ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ರಾಮನಗರ ಗ್ರಾಮೀಣ ಠಾಣೆಯಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆಯ ಅಡಿ ಎಫ್‍ಐಆರ್ ದಾಖಲಿಸಲಾಗಿದೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಹಲವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ.   

Similar News