ಕುರಿ ಮಾಂಸದಂಗಡಿಯಲ್ಲಿ ದನದ ಮಾಂಸ ಮಾರಾಟ ಪ್ರಕರಣ: ಆರೋಪಿಗೆ ಹೈಕೋರ್ಟ್ ನಿಂದ ಜಾಮೀನು

Update: 2023-05-27 14:36 GMT

ಬೆಂಗಳೂರು, ಮೇ 27: ಕುರಿ ಮಾಂಸದಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡಿದ ಆರೋಪಕ್ಕೆ  ಸಂಬಂಧಪಟ್ಟಂತೆ ಬಂಧನ ಭೀತಿ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣ ಸಂಬಂಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ-2020ರ ಅಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಠಾಣಾ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಇದರಿಂದ ಬಂಧನ ಭೀತಿಯಲ್ಲಿದ್ದ ಹೈದರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಆಟೋದಲ್ಲಿ ಗೋ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಆ ಇಬ್ಬರು ಆರೋಪಿಗಳು, ಅರ್ಜಿದಾರ ತಮಗೆ ಗೋಮಾಂಸ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಅರ್ಜಿದಾರ ಶೇ.60ರಷ್ಟು ಅಂಗವೈಕಲ್ಯ ಹೊಂದಿರುವುದನ್ನು ದೃಢಪಡಿಸಿ ಬೆಂಗಳೂರು ಮೆಡಿಕಲ್ ಬೋರ್ಡ್ ನೀಡಿರುವ ಪ್ರಮಾಣ ಪತ್ರವನ್ನು ಆತನ ಪರ ವಕೀಲರು ಕೋರ್ಟ್‍ಗೆ ಸಲ್ಲಿಸಿದ್ದಾರೆ.

ಇಬ್ಬರು ಆರೋಪಿಗಳು ಈಗಾಗಲೇ ಬಂಧನಕ್ಕೆ ಒಳಗಾಗಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಸಹ ಪಡೆದುಕೊಂಡಿದ್ದಾರೆ. ಇದರಿಂದ ಅರ್ಜಿದಾರನಿಗೆ ಜಾಮೀನು ನಿರಾಕರಿಸಲು ಯಾವುದೇ ಸಕಾರಣ ಇಲ್ಲವಾಗಿದ್ದು, ಷರತ್ತುಗಳನ್ನು ವಿಧಿಸಿ ಜಾಮೀನು ನೀಡಬಹುದಾಗಿದೆ. ಅರ್ಜಿದಾರ ಮುಂದೆ ಬಂದು ತನಿಖೆಗೆ ಸಹಕರಿಸಬೇಕಿದೆ ಎಂದು ತಿಳಿಸಿದರು.

ಸರಕಾರಿ ಪರ ವಕೀಲರು ವಾದಿಸಿ, ಕುರಿ ಮಾಂಸದ ವ್ಯಾಪಾರ ಅಂಗಡಿ ನಡೆಸುತ್ತಿದ್ದ ಅರ್ಜಿದಾರರು, ಗೋಮಾಂಸ ಮಾರಾಟ ಮಾಡುತ್ತಿದ್ದ ಎಂಬ ಬಗ್ಗೆ ಆರೋಪವಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕಿದೆ. ಅರ್ಜಿದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ, ನಿರೀಕ್ಷಣಾ ಜಾಮೀನು ಪಡೆಯುವ ಅರ್ಹತೆ ಅರ್ಜಿದಾರ ಹೊಂದಿಲ್ಲವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.

Similar News