ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ: ಶಾಸಕ ವಿಜಯಾನಂದ ಕಾಶಪ್ಪನವರ್

Update: 2023-05-27 16:56 GMT

ಬೆಂಗಳೂರು, ಮೇ 27: ಮುಂಬರುವ ದಿನಗಳಲ್ಲಿ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿರುವ ಕಾರಣ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಶಾಸಕ ವಿಜಯನಂದ ಕಾಶಪ್ಪನವರ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ತಮ್ಮ ಬಳಿ ಮಾತನಾಡಿದ್ದು, ನ್ಯಾಯ ಒದಗಿಸಿ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಸಂಪುಟದಲ್ಲಿ ಪಂಚಮಸಾಲಿ ಸಮಾಜಕ್ಕೆ ಯಾವುದೇ ರೀತಿಯಲ್ಲೂ ಅನ್ಯಾಯವಾಗಿಲ್ಲ ಎಂದರು.

ಸಂಪುಟಕ್ಕೆ ಸೇರ್ಪಡೆಯಾಗಬೇಕು ಎಂಬುದು ಕಾರ್ಯಕರ್ತರ ಹಾಗೂ ಸಮಾಜದ ಮುಖಂಡರ ಒತ್ತಾಸೆಯಾಗಿತ್ತು. ಅಂತಿಮವಾಗಿ ನಮ್ಮ ಒಲವು ನಿಲುವು ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದರು.

ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಸಂಭವವಿತ್ತು. ದಿಲ್ಲಿಯಲ್ಲಿ ಕೊನೆ ಕ್ಷಣದವರೆಗೂ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆದರೆ ಕೊನೆ ಕ್ಷಣದಲ್ಲಿ ಬಿಟ್ಡು ಹೋಗಿದೆ. ಯಾವ ಕಾರಣಕ್ಕಾಗಿ ಹೀಗಾಯಿತು ಎಂಬುದರ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ವಿಜಯನಂದಾ ಕಾಶಪ್ಪನವರ್ ತಿಳಿಸಿದರು.

ನನಗೆ ಸಚಿವ ಸ್ಥಾನ ಸಿಕ್ಕರೆ ಬಾಗಲಕೋಟೆ ಹಾಗೂ ಹುನಗುಂದ ಭಾಗದಲ್ಲಿ ಕಾಂಗ್ರೆಸ್ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗಬೇಕು. ನನಗೆ ಯಾರು ಸಚಿವ ಸ್ಥಾನ ತಪ್ಪಿಸಿದರು ಎಂಬುದನ್ನು ಬಹಿರಂಗಪಡಿಸಲು ಇಚ್ಛಿಸುವುದಿಲ್ಲ. ಯಾರೊಬ್ಬರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡುವುದಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರಬೇಕು ಎಂಬುದು ಜನತೆಯ ಕನಸು. ಆ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಸಚಿವ ಸ್ಥಾನ ಕೈ ತಪ್ಪಿದರೂ ಶಾಸಕನಾಗಿಯೇ ಉತ್ತಮ ಕೆಲಸ ಮಾಡುತ್ತೇನೆ ಎಂದು ಕಾಶಪ್ಪನವರ್ ವಿಶ್ವಾಸ ವ್ಯಕ್ತಪಡಿಸಿದರು.

Similar News