ಬೆಂಗಳೂರು | ಕೈ-ಕಾಲು ಕಟ್ಟಿ ಹಾಕಿ ವೃದ್ಧೆಯ ಹತ್ಯೆ ಪ್ರಕರಣ: ಆರೋಪಿಗಳಿಗಾಗಿ ತೀವ್ರ ಶೋಧ

Update: 2023-05-28 13:05 GMT

ಬೆಂಗಳೂರು, ಮೇ 28: ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನದ ಸರ,ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಿವಾಸಿ ಕಮಲಾ (82) ಅವರನ್ನು ಶನಿವಾರ ಸಂಜೆ ಕೊಲೆ ಮಾಡಿ ದುಷ್ಕರ್ಮಿಗಳು ಚಿನ್ನಾಭರಣಗಳನ್ನು ಲೂಟಿ ಮಾಡಿದ್ದು ಅವರ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆಯಾದ ಕಮಲ ಅವರ ಪತಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದು. ಇವರ ಮೂವರು ಮಕ್ಕಳು ನಗರದ ಬೇರೆಡೆ ಪ್ರತ್ಯೇಕವಾಗಿ ನೆಲೆಸಿದ್ದಾರೆ. ಹೀಗಾಗಿ ಮನೆಯಲ್ಲಿ ಕಮಲಾ ಒಂಟಿಯಾಗಿದ್ದರು. ಸಂಜೆ 7 ಗಂಟೆ ಸುಮಾರಿಗೆ ನೆರೆ ಮನೆಯವರು ಕಮಲಾ ಅವರನ್ನು ಮಾತನಾಡಿಸಲು ಮನೆ ಬಳಿ ಬಂದಾಗ ಬಾಗಿಲು ತೆರೆದಿರುವುದು ಕಂಡು ಬಂದಿದೆ.

ಈ ವೇಳೆ ಒಳ ಹೋಗಿ ನೋಡಿದಾಗ ಕೈ-ಕಾಲು ಕಟ್ಟಿಬಾಯಿಗೆ ಪ್ಲಾಸ್ಟರ್ ಹಾಕಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಮಲಾ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದಾಗ ಕಮಲಾ ಅವರು ಮೃತಪಟ್ಟಿರುವುದು ಖಚಿತವಾಗಿದೆ.

Similar News