ಮುಖ್ಯಮಂತ್ರಿಯ ಕಚೇರಿಯಲ್ಲಿ ಬಿಜೆಪಿ ಸರಕಾರದ ಅವಧಿಯ ಹಿರಿಯ ಅಧಿಕಾರಿಗಳಿಗೆ ಮಣೆ!

ಅಲ್ಪಸಂಖ್ಯಾತ ಸಮುದಾಯದ ಅರ್ಹ ಉನ್ನತ ಅಧಿಕಾರಿಗಳಿಗಿಲ್ಲ ಸ್ಥಾನ

Update: 2023-05-29 09:01 GMT

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಪಿಎಸ್ಸೈ ಹಗರಣ, ಲೋಕೋಪಯೋಗಿ ಇಲಾಖೆಯಲ್ಲೂ ಶೇ.40 ಕಮಿಷನ್ ಆರೋಪ ಮತ್ತು ಕೋಮು ಗಲಭೆ ಪ್ರಚೋದಿತ ಭಾಷಣಗಳು, ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಿ ಎಂದು ಕೊಲೆಗೆ ಪ್ರಚೋದನೆ, ದ್ವೇಷ ಭಾಷಣ ಇವುಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದ ಒಳಾಡಳಿತ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿರುವುದು ಅಧಿಕಾರಶಾಹಿಯೊಳಗೇ ಚರ್ಚೆ ಹುಟ್ಟು ಹಾಕಿದೆ.

ಅದೇ ರೀತಿ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಎನ್. ಜಯರಾಮ್ ಅವರು ರಾಷ್ಟ್ರೋತ್ಥಾನ ಪರಿಷತ್, ಸಂಘ ಪರಿವಾರದ ಹಿನ್ನೆಲೆಯ ಜನಸೇವಾ ಟ್ರಸ್ಟ್‌ಗೆ ನಿಯಮಬಾಹಿರವಾಗಿ ಗೋಮಾಳ ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಅಲ್ಲದೆ ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಹಲವೆಡೆ ರಾಷ್ಟ್ರೋತ್ಥಾನ ಪರಿಷತ್‌ಗೆ ನಿಯಮಬಾಹಿರವಾಗಿ ಗೋಮಾಳ ಮಂಜೂರು ಮಾಡಿ ಆದೇಶಿಸಿದ್ದರು. ಆದರೂ ಇದೇ ಜಯರಾಮ್ ಅವರನ್ನು ಮುಖ್ಯಮಂತ್ರಿಗಳಿಗೆ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.

ಈ ಬಾರಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಲು ಅಲ್ಪಸಂಖ್ಯಾತ ಸಮುದಾಯಗಳ ಮತಗಳು ಬಹಳಷ್ಟು ಮಟ್ಟಿಗೆ ಕಾರಣವಾಗಿವೆ. ಆದರೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಯಾವೊಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆದರೆ ಸ್ವಜಾತಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿ ಯಂತಹ ಹುದ್ದೆಗಳನ್ನು ಸೃಷ್ಟಿಸಿ ನೇಮಿಸಲಾಗಿದೆ.

ಗೋಯಲ್ ನೇಮಕಕ್ಕೆ ಆಕ್ಷೇಪವೇಕೆ?

ಬಿಜೆಪಿ, ಬಜರಂಗದಳ ಸೇರಿದಂತೆ ಹಿಂದುತ್ವ ಸಂಘಟನೆಗಳಿಗೆ ಸೇರಿದ ನೂರಾರು ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೂ ಅವುಗ

ಳನ್ನು ವಿಚಾರಣೆಯಿಂದಲೇ ಹಿಂಪಡೆಯುವ ಸಂಬಂಧ ಒಳಾಡಳಿತ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್ ಗೋಯಲ್ ಅವರೇ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಿ ಸರಕಾರದ ಆದೇಶವನ್ನು ಹೊರಡಿಸಿದ್ದರು.

ಅಲ್ಲದೆ, ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯ ಕರ್ತರ ವಿರುದ್ಧದ ಪ್ರಕರಣಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಹಿಂಪಡೆದುಕೊಂಡಿದ್ದರು ಎಂದು ಬಿಜೆಪಿ ಸಚಿವರು ಪದೇ ಪದೇ ಟೀಕಿಸಿದ್ದರು. ಈ ಸಂಬಂಧ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದುಕೊಂಡಿರುವ ಬಗ್ಗೆ ಮಾಹಿತಿ ಕೇಳಿದ್ದರೂ ಇದೇ ರಜನೀಶ್ ಗೋಯಲ್ ಅವರ ಕಚೇರಿಯು ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ. ಅಷ್ಟೇ ಅಲ್ಲದೇ ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಹಿಂದಿನ ಸರಕಾರದ ಸಚಿವ ಡಾ. ಅಶ್ವತ್ಥನಾರಾಯಣ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ರಜನೀಶ್ ಗೋಯಲ್ ಅವರು ಸೂಚಿಸಿರಲಿಲ್ಲ. ಆದರೀಗ ಇವರನ್ನೇ ತಮ್ಮ ಕಚೇರಿಗೆ ನೇಮಿಸಿಕೊಂಡಿರುವುದು ವಿರೋಧಾಭಾಸಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ನಡೆಸಿದ್ದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿಯೂ ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಿ ಎಂದು ಕೊಲೆಗೆ ನೀಡಿದ್ದ ಪ್ರಚೋದನೆ, ದ್ವೇಷ ಭಾಷಣ ಮಾಡಿದ್ವವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಅಶಾಂತಿ, ಗಲಭೆ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದರೂ ಪೊಲೀಸ್ ಇಲಾಖೆಯು ನಿರ್ಲಕ್ಷ್ಯ ವಹಿಸಿದ್ದರ ಕುರಿತು ಪ್ರಸ್ತಾಪವಾಗಿತ್ತು. ಪೊಲೀಸ್ ಕೇಸರೀಕರಣದ ಕುರಿತು ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದ್ದರು.

ಅಲ್ಲದೇ, ಪಿಎಸ್ಸೈ ಹಗರಣದ ಕುರಿತು ದಾಖಲೆ ಬಿಡುಗಡೆ ಮಾಡಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲೀಸ್ ಇಲಾಖೆ ನೀಡಿದ್ದ ಕಿರುಕುಳದ ಬಗ್ಗೆಯೂ ಇದೇ ಸಭೆಯಲ್ಲಿಯೇ ಕಿಡಿ ಕಾರಿದ್ದರು. ಈ ಸಭೆಯಲ್ಲಿ ರಜನೀಶ್ ಗೋಯಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದರು. ಆದರೆ ರಜನೀಶ್ ಗೋಯಲ್ ಅವರು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿರುವುದಕ್ಕೆ ಇದುವರೆಗೂ ತಗಾದೆ ತೆಗೆಯದಿರುವುದು ಚರ್ಚೆಗೆ ಗ್ರಾಸವಾಗಿದೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಲಂಚಗುಳಿತನ ನಡೆಯುತ್ತಿದೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ದನಿ ಎತ್ತಿದ್ದರು. ಪಿಎಸ್ಸೈ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಗಂಭೀರ ಆರೋಪಕ್ಕೀಡಾಗಿದ್ದ ಎಡಿಜಿಪಿ ಅಮೃತ್‌ಪೌಲ್ ಅವರ 164 ಹೇಳಿಕೆಯನ್ನು ಪಡೆದುಕೊಳ್ಳುವಲ್ಲಿ ಪೊಲೀಸ್ ಅಧಿಕಾರಿಗಳು ವಿಳಂಬ ಎಸಗಿದ್ದಾರೆ ಎಂದೂ ವಿಧಾನಸಭೆ ಅಧಿವೇಶನದಲ್ಲಿ ಆರೋಪಿಸಿದ್ದರು. ಆದರೂ ಒಳಾಡಳಿತ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್ ಗೋಯಲ್ ಅವರು ಈ ಸಂಬಂಧ ಯಾವುದೇ ಕಠಿಣ ನಿರ್ಧಾರ ಕೈಗೊಂಡಿರಲಿಲ್ಲ.ಅಲ್ಲದೇ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪವು ಪಿಡಬ್ಲ್ಯೂಡಿ ಇಲಾಖೆಯ ಮೇಲೂ ಇತ್ತು. ಒಳಾಡಳಿತ ಇಲಾಖೆ ಜತೆಗೆ ಲೋಕೋಪಯೋಗಿ ಇಲಾಖೆಗೂ ರಜನೀಶ್ ಗೋಯಲ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಅವಧಿಯಲ್ಲಿ ಪಿಡಬ್ಲ್ಯುಡಿ ಇಲಾಖೆಯು 4,500 ಕೋಟಿ ರೂ. ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿತ್ತು. ಈ ಆರೋಪದ ಕುರಿತು ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನೂ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದನ್ನು ಸ್ಮರಿಸಬಹುದು. ಹಿಂದಿನ ಬಿಜೆಪಿ ಸರಕಾರದಲ್ಲಿ ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಎನ್. ಜಯರಾಮ್ ಅವರನ್ನು ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಅಧಿಕಾರಶಾಹಿಯಲ್ಲಿ ಭಿನ್ನಾಭಿಪ್ರಾಯಗಳು ಕೇಳಿ ಬಂದಿವೆ. ರಾಷ್ಟ್ರೋತ್ಥಾನ ಪರಿಷತ್ ಮತ್ತು ಸಂಘ ಪರಿವಾರದ ಹಿನ್ನೆಲೆಯ ಜನಸೇವಾ ಟ್ರಸ್ಟ್‌ಗೆ ಕಾನೂನುಬಾಹಿರವಾಗಿ ಗೋಮಾಳವನ್ನು ಮಂಜೂರು ಮಾಡಿದ್ದ ಅವಧಿಯಲ್ಲಿಯೂ ಎನ್. ಜಯರಾಮ್ ಅವರು ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದರು.

ಜನಸೇವಾ ಟ್ರಸ್ಟ್‌ಗೆ ಮಾರ್ಗಸೂಚಿಯಂತೆ ಶೇ.5ರ ದರದಲ್ಲಿ 35 ಎಕರೆ ಮಂಜೂರು ಮಾಡಿದ್ದಲ್ಲದೆ ಸರಕಾರದ ಬೊಕ್ಕಸಕ್ಕೆ 139 ಕೋಟಿಗೂ ಹೆಚ್ಚು ನಷ್ಟಕ್ಕೆ ಜಯರಾಮ್ ಅವರು ಕಾರಣರಾಗಿದ್ದರು. ಹಿಂದಿನ ಬಿಜೆಪಿ ಸರಕಾರದೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಸಂಘ ಪರಿವಾರದ ಅಂಗ ಸಂಸ್ಥೆಗಳಿಗೆ ಕಾನೂನುಬಾಹಿರವಾಗಿ ಗೋಮಾಳ ಮಂಜೂರು ಮಾಡಿದ್ದ ಅಧಿಕಾರಿಯನ್ನೇ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಕಚೇರಿಯಲ್ಲಿಲ್ಲ ಅಲ್ಪಸಂಖ್ಯಾತ ಸಮುದಾಯದ ಅಧಿಕಾರಿಗಳು

ಹಾಗೆಯೇ ಸಣ್ಣಪುಟ್ಟ ಜಾತಿಯವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿ ಸಾಮಾಜಿಕ ನ್ಯಾಯ ನೀತಿಯನ್ನು ಪಾಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯವಾಗಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವ ಅಧಿಕಾರಿ, ನೌಕರರನ್ನು ನಿರ್ಲಕ್ಷಿಸಿದ್ದಾರೆ. ಈ ಬಗ್ಗೆ ಎರಡೂ ಸಮುದಾಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಈಗ ನಡೆದಿರುವ ಚುನಾವಣೆಯಲ್ಲಿ ಶೇ.90ರಷ್ಟು ಮತಗಳು ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯದವರು ಕಾಂಗ್ರೆಸ್‌ಗೆ ಮತಗಳನ್ನು ಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದರೆ ಈ ಎರಡೂ ಸಮುದಾಯದ ಮತಗಳು ಪ್ರಧಾನವಾಗಿವೆ. ಕ್ರಿಶ್ಚಿಯನ್ ಮತ್ತು ಮುಸ್ಲಿಮ್ ಸಮುದಾಯದಲ್ಲಿಯೂ ಅರ್ಹರಾದ ಉನ್ನತ ಅಧಿಕಾರಿಗಳಿದ್ದಾರೆ. ಯಾಕೆ ಅವರನ್ನು ಮುಖ್ಯಮಂತ್ರಿ ಸಚಿವಾಲಯದಲ್ಲಿ ನಿಯೋಜಿಸಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ತಕ್ಷಣವೇ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯದ ಅರ್ಹ ಅಧಿಕಾರಿಗಳನ್ನು ಸೇರಿಸಿಕೊಳ್ಳಬೇಕು ಎನ್ನುತ್ತಾರೆ ಇಂಡಿಯನ್ ಕ್ರಿಶ್ಚಿಯನ್ ಯುನೈಟೆಡ್ ಫೋರಂ ಪ್ರಧಾನ ಕಾರ್ಯದರ್ಶಿ ಐದಾ ಮಾರ್ಗರೇಟ್.

Similar News