ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಪ್ರಕರಣ: ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅಶ್ವತ್ಥನಾರಾಯಣ ಅರ್ಜಿ

Update: 2023-05-29 13:39 GMT

ಬೆಂಗಳೂರು, ಮೇ 29: ಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕರೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‍ಐಆರ್ ರದ್ದು ಕೋರಿ ಮಾಜಿ ಸಚಿವ, ಹಾಲಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. 

ಅಲ್ಲದೆ, ನ್ಯಾಯಪೀಠವು, ಅರ್ಜಿಯನ್ನು ಮೇ 30ರಂದು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರ ಅಶ್ವತ್ಥನಾರಾಯಣ್ ವಿರುದ್ಧ ದಾಖಲಾಗಿರುವ ಪ್ರಕರಣ ಸಂವಿಧಾನದ ಪರಿಚ್ಛೇದ 14 ಮತ್ತು 21ಕ್ಕೆ ವಿರುದ್ಧವಾಗಿದ್ದು, ಕಾನೂನು ಬಾಹಿರವಾಗಿ ಪ್ರಕರಣ ದಾಖಲಿಸಲಾಗಿದೆ. ಕ್ರಿಮಿನಲ್ ಬೆದರಿಕೆ, ದಂಗೆ ಉಂಟು ಮಾಡುವುದು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದಕ್ಕೆ ಸೂಕ್ತ ಪುರಾವೆಗಳು ಇಲ್ಲವಾಗಿದೆ. 

ಅಲ್ಲದೆ, ದೂರುದಾರರು ಘಟನಾ ಸ್ಥಳದಲ್ಲಿ ಇರಲಿಲ್ಲ. ಅರ್ಜಿದಾರರ ಭಾಷಣದಿಂದ ಈವರೆಗೂ ಯಾವುದೇ ಗಲಭೆ ನಡೆದಿಲ್ಲ. ಅಲ್ಲದೇ ಅರ್ಜಿದಾರರ ಹೇಳಿಕೆಯಿಂದ ಯಾವ ವ್ಯಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಕರಣವೇನು?: 2023ರ ಫೆಬ್ರವರಿ 15 ರಂದು ಸಚಿವರಾಗಿದ್ದ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉರಿಗೌಡ-ನಂಜೆಗೌಡ ಟಿಪ್ಪುವನ್ನು ಕೊಂದಿದ್ದರು. ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದಿದ್ದರು. ಈ ಸಂಬಂಧ ಕೆಪಿಸಿಸಿ ವಕ್ತಾರ ಲಕ್ಷ್ಮಣ ಅವರು ಮೇ 24ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Similar News