ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರೂ ಸಹ ಕಾಂಗ್ರೆಸ್ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ: ಪ್ರಿಯಾಂಕ್ ಖರ್ಗೆ

Update: 2023-05-30 10:21 GMT

ಬೆಂಗಳೂರು: ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರೂ ಸಹ ನಮ್ಮ ಕಾಂಗ್ರೆಸ್ ಸರ್ಕಾರವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ತಗೆದುಕೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ ಹೇಳಿದರು.

ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. KKRDB ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 12 - 12 - 2022 ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 1 - 6 -2022 ರಂದು ಪತ್ರ ಬರೆಯಲಾಗಿತ್ತು ಎಂದು ತಿಳಿಸಿದರು.

ನೂತನ ಸರ್ಕಾರ ಬಂದ ನಂತರ ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ನಂತರ ತಕ್ಷಣ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ ಎಂದು ಹೇಳಿದರು.

Full View

Similar News