ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Update: 2023-05-30 15:26 GMT

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ವರ್ಷಧಾರೆಯಾಗುತ್ತಿದ್ದು, ಮಂಗಳವಾರ ಮಧ್ಯಾಹ್ನ ಹಾಗೂ ಸಂಜೆ ಕೆಲ ಕಾಲ ಗುಡುಗು, ಬಿರುಗಾಳಿ ಸಹಿತ ಬೆಂಗಳೂರಿನಲ್ಲಿ ಹಲವೆಡೆ ಭಾರೀ ಮಳೆ ಸುರಿಯಿತು. ಇದರಿಂದ, ಜೆಸಿ ರಸ್ತೆ, ಕಾರ್ಪೋರೇಷನ್ ವೃತ್ತ ಸೇರಿ ಕೆಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. 

ಮೆಜೆಸ್ಟಿಕ್, ಮಲ್ಲೇಶ್ವರ, ಜಯನಗರ, ಬಸವನಗುಡಿ, ವಿಜಯನಗರ, ದೀಪಾಂಜಲಿನಗರ, ಹೊಸಹಳ್ಳಿ, ಅತ್ತಿಗುಪ್ಪೆ, ಜೆಸಿ ರಸ್ತೆ, ಕಾರ್ಪೋರೇಷನ್, ಯಶವಂತಪುರ ಸುತ್ತಮುತ್ತ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯಿತು. ಮಳೆ ಹಿನ್ನೆಲೆಯಲ್ಲಿ ಪ್ರಯಾಣಿಕರು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಅಲ್ಲಲ್ಲಿ ಟ್ರಾಫಿಕ್ ಜಾಮ್‍ನಿಂದ ವಾಹನ ಸವಾರರು ಪ್ರಯಾಸಪಡಬೇಕಾಯಿತು. ಕೆಲವೆಡೆ ಮರಗಳು ಧರೆಗುರುಳಿದ ಮಾಹಿತಿ ಲಭ್ಯವಾಗಿದ್ದು, ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. 

ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಸರ್ಕಲ್ ಅಂಡರ್ ಪಾಸ್‍ನಲ್ಲಿ ಸಂಚಾರ ನಿಬರ್ಂಧಿಸಿ ಪೊಲಿಸರು ಬ್ಯಾರಿಕೇಡ್ ಹಾಕಿದ್ದರು, ಇತ್ತೀಚೆಗೆ ಇದೇ ಅಂಡರ್ ಪಾಸ್‍ನಲ್ಲಿ ಮಳೆನೀರು ಕಾರಿನಲ್ಲಿ ನುಗ್ಗಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಅಂಡರ್ ಪಾಸ್‍ನ್ನು ಬಂದ್ ಮಾಡಲಾಗಿದೆ. 

ಜೂ.1ರಿಂದ ಮಳೆ: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗ ಪೂರ್ವ ಮುಂಗಾರು ಗುಡುಗು, ಸಿಡಿಲಿನ ಸಮೇತ ಅಬ್ಬರಿಸುತ್ತಿದೆ. ಜೂನ್ 1ರವರೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪೂರ್ವ ಮುಂಗಾರಿನ ಪರಿಣಾಮ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 1ರ ತನಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಗಾಳಿಯೊಂದಿಗೆ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ, ಜನರು ಎಚ್ಚರದಿಂದ ಇರಬೇಕು ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ. 

ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಸೂಚನೆ

ರಾಜಧಾನಿ ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆ, ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಕುರಿತು ಮಂಗಳವಾರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವ ಅವರು, ನಗರದಲ್ಲಿ ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

ಸಂಭವನೀಯ ಮಳೆ ಅನಾಹುತಗಳ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಯಾವುದೇ ಭಾಗದಲ್ಲಿ ಅನಾಹುತಗಳಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್, ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಶಿವಕುಮಾರ್ ಆದೇಶ ನೀಡಿದ್ದಾರೆ.

Similar News