ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಿಇಓಗೆ ನೋಟಿಸ್
Update: 2023-05-30 18:12 GMT
ಬೆಂಗಳೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಪ್ರಕರಣ ಹಿನ್ನೆಲೆ, ಈ ಬಗ್ಗೆ ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯಿತಿ ಏಳು ದಿನಗಳೊಳಗೆ ಸಮಜಾಯಿಷಿ ನೀಡಬೇಕೆಂದು ಸಿಇಓಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಂಗಳವಾರ ನೋಟಿಸ್ ನೀಡಿದೆ.
ಲಿಂಗಸೂಗುರು ತಾಲ್ಲೂಕಿನ ಗೋರೆಬಾಳ ಹಾಗೂ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮಗಳ ಗ್ರಾ.ಪಂ ವ್ಯಾಪ್ತಿಯಲ್ಲಿ ಕಲುಷಿತ ಕುಡಿಯುವ ನೀರಿನ ಪೂರೈಕೆಯಿಂದ ಸಾವು ನೋವುಗಳು ಉಂಟಾಗಿದ್ದು, ಗ್ರಾಮಸ್ಥರ ಆರೋಗ್ಯದ ದೃಷ್ಠಿಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡದ ಗ್ರಾ.ಪಂ.ಗಳಿಂದ ಜಲ ಕಾಯ್ದೆ 1974ರ ಉಲ್ಲಂಘನೆಯಾಗಿದೆ ಎಂದು ಮಂಡಳಿ ತಿಳಿಸಿದೆ.
ಇನ್ನು ಘಟನೆ ಕುರಿತಂತೆ ಈವರೆಗೂ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯಿಸಿರುವ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ನೋಟಿಸ್ ತಲುಪಿದ ಏಳು ದಿನಗಳೊಳಗೆ ಸೂಕ್ತ ಸಮಜಾಯಿಷಿ ನೀಡಬೇಕೆಂದು ಮಂಡಳಿ ಹೇಳಿದೆ.