ಉಡುಪಿ: ಜಿಲ್ಲಾ ನೌಕರರ ಸಂಘದ ಕಾರ್ಯದರ್ಶಿಗೆ ಬೀಳ್ಕೊಡುಗೆ

Update: 2023-05-31 13:18 GMT

ಉಡುಪಿ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗ ಶಾಲಾ ಅಧಿಕಾರಿ ಆದ ಎಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದುವ ಪ್ರಯುಕ್ತ ಉಡುಪಿಯ ಪುರಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಡಲಾಯಿತು.

ಎಚ್. ಉದಯ ಕುಮಾರ್ ಶೆಟ್ಟಿ ಆರೋಗ್ಯ ಇಲಾಖೆಯಲ್ಲಿ ೩೪ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಉಡುಪಿ ಜಿಲ್ಲಾ  ಸರಕಾರಿ ನೌಕರರ ಸಂಘದಲ್ಲಿ 12 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅತ್ಯುತ್ತಮ ಕ್ರೀಡಾಪಟು ಆಗಿರುವ ಇವರು, ಅಖಿಲ ಭಾರತ ಮಟ್ಟದ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ ಸತತ 7 ವರ್ಷಗಳ ಕಾಲ ರಾಜ್ಯವನ್ನು ಪ್ರತಿನಿಧಿಸಿದ್ದು, ಕಂಚಿನ ಪದಕವನ್ನೂ ಹಾಗೂ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಸಹ ಹಲವು ಪದಕಗಳನ್ನು ಪಡೆದಿದ್ದಾರೆ. ಮ್ಯಾರಥಾನ್ ಓಟಗಾರರಾಗಿರುವ ಇವರು ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟಗಳಲ್ಲಿ ಸಹ ಭಾಗವಹಿಸಿ ಪದಕಗಳನ್ನು ಪಡೆದಿದ್ದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ನೌಕರರ ಸಂಘ, ವಿವಿಧ ಕ್ರೀಡಾ ಸಂಸ್ಥೆಗಳ ವತಿಯಿಂದ ಕೂಡಾ ಉದಯ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. 

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರಶಾಂತ್ ಹಾವಂಜೆ, ಕೋಶಾಧಿಕಾರಿ ಷರೀಫ್ ಮ ರೋಣ, ಜಿಲ್ಲಾ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ಎನ್, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಅರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಭಿನಂದನೆ ಸಲ್ಲಿಸಿದರು. 

Similar News