ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಸಾವು, ಇಬ್ಬರಿಗೆ ಗಾಯ
Update: 2023-06-02 16:26 GMT
ಅಮರಾವತಿ: ಆಂದ್ರಪ್ರದೇಶದ ತಿರುಪತಿ ಜಿಲ್ಲೆಯ ಕೊವ್ವಕೊಲ್ಲಿ ಗ್ರಾಮದಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸುವ ಸಂದರ್ಭ ಐವರು ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಇತರ ಇಬ್ಬರನ್ನು ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ ಮೃತಪಟ್ಟವರನ್ನು ಇಡು ಕೊಂಡಾಲು (40), ಶಂಕರಯ್ಯ (32) ಹಾಗೂ ನಾಗೇಂದ್ರ (25) ಎಂದು ಗುರುತಿಸಲಾಗಿದೆ.
ಸ್ಫೋಟದ ಹಿಂದಿನ ಕಾರಣ ಇದುವರೆಗೆ ತಿಳಿದು ಬಂದಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ.