ಪಾರ್ಕಿಂಗ್‌ಗೆ ಮೀಸಲಿಟ್ಟ ಪ್ರದೇಶದಲ್ಲಿ ನಿಯಮ ಉಲ್ಲಂಘನೆ: ಕಮಿಷನರ್ ಕುಲದೀಪ್ ಕುಮಾರ್ ಜೈನ್

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ

Update: 2023-06-03 14:01 GMT

ಮಂಗಳೂರು: ನಗರದ ರಸ್ತೆ ಅಗಲವು ತುಂಬಾ ಕಿರಿದಾಗಿದೆ. ಆದರೆ ವಾಹನಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದಲ್ಲದೆ ಕೆಲವು ಕಟ್ಟಡಗಳ ಪಾರ್ಕಿಂಗ್‌ಗೆ ಮೀಸಲಿಟ್ಟ ಸ್ಥಳದಲ್ಲಿ ನಿಯಮ ಉಲ್ಲಂಘನೆಯಾಗಿದೆ. ಇದಕ್ಕೆ ಕಡಿವಾಣ ಹಾಕದ ಹೊರತು ಸಂಚಾರ ವ್ಯವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದರು.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆದ ‘ಫೋನ್ ಇನ್ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಪ್ರತಿಕ್ರಿಯಿಸಿದರು.

ನಗರದಲ್ಲಿ ಕಟ್ಟಡ ನಿರ್ಮಿಸಲು ಮಹಾನಗರ ಪಾಲಿಕೆಯು ಅನುಮತಿ ನೀಡುತ್ತದೆ. ಆದರೆ ಪೊಲೀಸ್ ಇಲಾಖೆ ಯಿಂದ ನಿರಕ್ಷೇಪಣಾ ಪತ್ರ ಪಡೆಯುವುದಿಲ್ಲ. ಹಾಗಾಗಿ ನಿಯಮ ಪಾಲನೆ ಮಾಡಿದ್ದಾರೆಯೇ ಎಂಬುದನ್ನು ಪಾಲಿಕೆ ಅಧಿಕಾರಿಗಳೇ ಗಮನಿಸಬೇಕು ಎಂದ ಅವರು, ಬೇಕಾಬಿಟ್ಟಿ  ಪಾರ್ಕಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಹೊರ ರಾಜ್ಯ, ಜಿಲ್ಲೆಯಿಂದ ಬರುವ ನಿರಾಶ್ರಿತರು ಕೂಡ ಸ್ಮಾರ್ಟ್‌ಸಿಟಿಯ ಅಂದವನ್ನು ಕೆಡಿಸುತ್ತ್ತಿದ್ದಾರೆ. ಅಪರಾಧ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಒತ್ತಾಯಿಸಿದರು.

ನಗರದ ಹಂಪನಕಟ್ಟೆಯಲ್ಲಿ ಖಾಸಗಿ ಬಸ್‌ಗಳು ಪಾರ್ಕಿಂಗ್ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂದು ಅತ್ತಾವರದಿಂದ ಕರೆ ಮಾಡಿದ ವ್ಯಕ್ತಿಯೊಬ್ಬರು ದೂರಿದರು. ಈ ಬಗ್ಗೆ ಕ್ರಮ ಜರಗಿಸಲು ಜೂ.5ರಿಂದ ಬೆಳಗ್ಗೆ 7ರಿಂದ ಸಂಚಾರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕಮಿಷನರ್ ತಿಳಿಸಿದರು.

ಮೂಡುಬಿದಿರೆಯಲ್ಲಿ ರಿಕ್ಷಾ ಚಾಲಕರು ಮೀಟರ್ ಹಾಕದೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿ ದ್ದಾರೆ. ಹಾಗಾಗಿ ಸಾರ್ವಜನಿಕ ಸ್ಥಳದಲ್ಲಿ ಎಲ್ಲರಿಗೆ ಕಾಣುವಂತೆ ದರಪಟ್ಟಿ ಹಾಕಬೇಕು ಎಂದು ಬಾಲಕೃಷ್ಣ ಎಂಬವರು ಮನವಿ ಮಾಡಿದರು. ಈ ಬಗ್ಗೆ ಆರ್‌ಟಿಒ ಜತೆ ಮಾತುಕತೆ ನಡೆಸಿ ಸಮಸ್ಯೆೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದರು.

ನಗರದಲ್ಲಿ ಸಿಟಿ ಬಸ್‌ಗಳು ಅತಿ ವೇಗದಿಂದ, ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿವೆ. ಅಪಘಾತಗಳಿಗೆ ಕಾರಣವಾಗು ತ್ತಿದೆ. ಹಾಗಾಗಿ ವೇಗದ ಚಾಲನೆಗೆ ಕಡಿವಾಣ ಹಾಕಬೇಕಿದೆ. ಪ್ರಕರಣಗಳಿಗೆ ಸಂಬಂಧಿಸಿ ವಶಕ್ಕೆ ಪಡೆಯಲಾದ ವಾಹನಗಳನ್ನು ಕೆಲವು ಠಾಣೆಗಳ ಬಳಿಯ ರಸ್ತೆ ಬದಿಯಲ್ಲೇ ಇಟ್ಟಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ದೂರಿಕೊಂಡರು.

ತಿಂಗಳ ಮೊದಲ ಶನಿವಾರ ಫೋನ್ ಇನ್ 

ಸಾರ್ವಜನಿಕರು ತಮ್ಮ ಸಮಸ್ಯೆ, ದೂರು, ಮಾಹಿತಿಗಳನ್ನು ಹಂಚಿಕೊಳ್ಳುವ ಸಲುವಾಗಿ ಪ್ರತಿ ತಿಂಗಳ ಮೊದಲ ಶನಿವಾರ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಫೋನ್ ಇನ್ ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್ ಬಿ.ಪಿ. ಎಸಿಪಿಗಳಾದ ರವೀಶ್ ನಾಯಕ್, ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.

Similar News