ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Update: 2023-06-06 08:55 GMT

ಬೆಂಗಳೂರು, ಜೂ. 6: ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದರು.

ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ರಾಜ್ಯದ ಕಾಂಗ್ರೆಸ್ ಸರಕಾರದ ನೀತಿಯನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಇಂದು ಏರ್ಪಡಿಸಿದ  ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. 

ವಿದ್ಯುತ್ ಬೆಲೆ ಏರಿಕೆಯ ಹೊರೆಯನ್ನು ರಾಜ್ಯದ ಜನರ ಮೇಲೆ ಕಾಂಗ್ರೆಸ್ ಸರಕಾರ ವಿಧಿಸಿದ್ದು, ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಖಂಡಿಸಿದರು. ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಕೇಶವ ಪ್ರಸಾದ್, ವಿನಯ ಬಿದರೆ, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಸಿ.ಕೆ.ರಾಮಮೂರ್ತಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ನಗರ ಜಿಲ್ಲಾಧ್ಯಕ್ಷರಾದ ನಾರಾಯಣ, ಮಂಜುನಾಥ್, ಎನ್.ಆರ್.ರಮೇಶ್, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಗೋಪೂಜೆ ನೆರವೇರಿಸಿದ ಕಾರ್ಯಕರ್ತರು ಮತ್ತು ಪ್ರಮುಖರು ಬಿಜೆಪಿ ಜಾರಿಗೊಳಿಸಿದ ಗೋಹತ್ಯಾ ನಿಷೇಧ ಕಾನೂನನ್ನು ಮುಂದುವರಿಸಬೇಕು ಮತ್ತು ಅದನ್ನು ಹಿಂದಕ್ಕೆ ಪಡೆಯದಂತೆ ಸರಕಾರವನ್ನು ಆಗ್ರಹಿಸಿದರು.

ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಯಥಾವತ್ ಮುಂದುವರಿಸುವಂತೆ ಒತ್ತಾಯಿಸಲಾಯಿತು.

Similar News