ಅಧಿಕಾರದಲ್ಲಿದ್ದಾಗ ಲೂಟಿ, ಈಗ ಪಾಠ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

Update: 2023-06-06 14:02 GMT

ಬೆಂಗಳೂರು, ಜೂ.6: ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದು ಹೊರಟರು. ಆದರೆ, ಈಗ ನಮಗೆ ಪಾಠ ಹೇಳಿಕೊಡಲು ಬರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಂಗಳವಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ 41 ನೆ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನೆ ಮಾಡಿದರು.

10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದೆಲ್ಲಾ ಹೇಳಿದ್ದಾರೆ. ಆದರೆ, ಇದುವರೆಗೂ ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದ ಅವರು, ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪಕ್ಷವೂ 2018ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ. ಅದುಅಲ್ಲದೆ, ನಮ್ಮ ಸರಕಾರ 15 ದಿನಗಳೊಳಗೆ ಎಲ್ಲ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
 

Similar News