ಕರಾವಳಿಯಲ್ಲಿ ಯಾವುದೇ ಬೆಲೆ ತೆತ್ತಾದರೂ ಕೋಮು ಸೌಹಾರ್ದತೆ ಉಳಿಸುತ್ತೇವೆ: ಗೃಹ ಸಚಿವ ಡಾ.ಪರಮೇಶ್ವರ್

Update: 2023-06-06 16:31 GMT

ಉಡುಪಿ, ಜೂ.6: ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮತ್ತು ಕೋಮುವಾದವನ್ನು ಪ್ರಚೋದಿಸುವ ಅನೈತಿಕ ಪೊಲೀಸ್‌ಗಿರಿಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಮ್ಮ ಸರಕಾರ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯೊಂದಿಗೆ ಆಡಳಿತ ನಡೆಸಲು ತೀರ್ಮಾನ ಮಾಡಿದೆ. ಆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಬೆಲೆ ತೆತ್ತಾದರು ಕೋಮು ಸೌಹಾರ್ದತೆ ಉಳಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿ ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿ ಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿ ಮಾತನಾಡುತ್ತಿದ್ದರು. ಇಂತಹ ಘಟನೆಗಳಲ್ಲಿ ಅಮಾಯಕ ವಿದ್ಯಾರ್ಥಿಗಳು, ಯುವಕರು ಬಲಿಪಶುಗಳಾಗುತ್ತಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ  ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

ಕರಾವಳಿ ಪ್ರದೇಶದಲ್ಲಿ ಮಾದಕ ವಸ್ತುಗಳ ದಂಧೆ ವ್ಯಾಪಕವಾಗಿ ನಡೆಯುತ್ತಿರು ವುದು ಗಮನಕ್ಕೆ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಮಾನಸಿಕವಾಗಿ ದುರ್ಬಲರಾಗಿರುವವರನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ಗಳನ್ನು ಸರಬರಾಜು ಮಾಡಲಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪೆಡ್ಲರ್ಸ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾ ಗುವುದು. ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆ ವಿರುದ್ಧ ಕ್ರಮಕ್ಕೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಇಂತಹ ಘಟನೆಗಳು ನಡೆದರೆ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಮತ್ತು ವಿಭಾಗ ವ್ಯಾಪ್ತಿಯ ಡಿವೈಎಸ್ಪಿ ಮತ್ತು ಜಿಲ್ಲೆಯ ಎಸ್ಪಿ ಅಥವಾ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾ ಗುವುದು ಎಂದ ಅವರು, ಅದೇ ರೀತಿ ಮಟ್ಕಾ, ಜುಗಾರಿ ಸೇರಿದಂತೆ ಸಮಾಜ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲು ಠಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸೈಬರ್ ಕ್ರೈಮ್ ತಡೆಗೆ ತರಬೇತಿ

ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸಿಬ್ಬಂದಿಗಳಿಗೆ ತರಬೇತಿ ನೀಡಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಅದೇ ರೀತಿ ಇಂತಹ ವಂಚನೆಗಳು ನಡೆದಾಗ 24ಗಂಟೆಗಳ ಒಳಗಿನ ಗೋಲ್ಡನ್ ಅವಧಿಯಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರೆ ಕ್ರಮ ತೆಗೆದು ಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ನಕ್ಸಲ್ ಚಟುವಟಿಕೆ ಕಡಿಮೆ ಆಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ಬರ್ಖಾಸ್ತುಗೊಳಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಸದ್ಯಕ್ಕೆ ಯಾವುದೇ ಯೋಚನೆ ಮಾಡಿಲ್ಲ ಎಂದರು. ಹಿಂದಿನ ಸರಕಾರದ ಶೇ.40 ಕಮಿಷನ್ ಕುರಿತ ತನಿಖೆ ಮಾಡುವ ಬಗ್ಗೆ ಉತ್ತರಿಸಿದ ಅವರು, ಈ ಬಗ್ಗೆ ಚರ್ಚೆ ಮಾಡಿ ಸಾಧಕ ಬಾಧಕ ನೋಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹಿಜಾಬ್ ಕುರಿತು ಕೋರ್ಟಿನ ತೀರ್ಪನ್ನು ನಾವು ಕಾಯುತ್ತಿದ್ದೇವೆ.  ಅದರಂತೆ ಮುಂದೆ ನಾವು ನಮ್ಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಬಿಜೆಪಿಯವರು ಟೀಕೆ ಮಾಡುತ್ತಾರೆ ಎಂದು ನಾವು ಸರಕಾರ ನಡೆಸುವುದಿಲ್ಲ. ಯಾವುದು ಸರಿ ಯಾವುದು ತಪ್ಪು ಎಂಬುದು ನಮಗೆ ಗೊತ್ತಿದೆ. ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ಕೊಡುವುದೇ ನಮ್ಮ ಉದ್ದೇಶ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಗಳೂರು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ, ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ನಿಕಮ್ ಪ್ರಕಾಶ್ ಅಮ್ರಿತ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಉಪಸ್ಥಿತರಿದ್ದರು.

ಹಂತಹಂತವಾಗಿ 50000 ಸಿಬ್ಬಂದಿಗಳ ನೇಮಕ

ರಾಜ್ಯದಲ್ಲಿ ಪ್ರತಿವರ್ಷ ಪೊಲೀಸ್ ಇಲಾಖೆಯಲ್ಲಿ 3000 ಮಂದಿ ನಿವೃತ್ತರಾಗುತ್ತಿದ್ದಾರೆ. ಇದರಿಂದ ಬಹಳ ಹುದ್ದೆಗಳು ಖಾಲಿ ಇದ್ದು, ಅದನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಮುಂದೆ ಹಂತಹಂತವಾಗಿ 50000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಸಿಬ್ಬಂದಿಗಳ ನೇರ ನೇಮಕಾತಿಯು ಎರಡು ವರ್ಷಗಳಿಂದ ಬಾಕಿ ಇದೆ. ನೇಮಕಾತಿ ಹಗರಣದಲ್ಲಿ ಯಾವುದೇ ತಪ್ಪು ಮಾಡವರು ನ್ಯಾಯ ನೀಡುವಂತೆ  ಕೋರ್ಟಿಗೆ ಹೋಗಿದ್ದಾರೆ. ಆ ಬಗ್ಗೆ ಕ್ರಮ ತೆಗೆದುಕೊಳ್ಳಲು ಕೋರ್ಟ್‌ ಯಿಂದ ತಡೆಯಾಜ್ಞೆ ಇದೆ. ಅದು ತೆರವುಗೊಳಿಸಿದ ನಂತರ ಕಾನೂನು ಸಲಹೆ ಪಡೆದು ಸರಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಇಲಾಖೆಯಲ್ಲಿ ಭಡ್ತಿ ಮತ್ತು ವೇತನ ಹೆಚ್ಚಳವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ತಕ್ಷಣ ಟೈಮ್‌ ಫ್ರೇಮ್‌ನಲ್ಲಿ ಮಾಡುವಂತೆ ಸೂಚನೆ ಕೊಟ್ಟಿದ್ದೇನೆ. ನೇಮಕಾತಿಯಾದ ಕೂಡಲೇ ಭಡ್ತಿ ನೀಡಲಾಗುವುದು. ಅದೇ ರೀತಿ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆ ಬಗ್ಗೆಯೂ ಪರಿಶೀಲನೆ ಮಾಡುತ್ತೇವೆ. ಕರಾವಳಿ ಕವಾಲು ಪೊಲೀಸ್ ಪಡೆಯನ್ನು ಅಗತ್ಯ ಬಿದ್ದರೆ ಇನ್ನಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು.

Similar News