ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ; ಮಾಜಿ ಪ್ರಧಾನಿ ದೇವೇಗೌಡರ ಪ್ರತಿಕ್ರಿಯೆ ಏನು?

Update: 2023-06-06 15:46 GMT

ಬೆಂಗಳೂರು: 'ನನಗೆ ಈಗ 91 ವರ್ಷ ವಯಸ್ಸು, ಆದ್ದರಿಂದ ನಾನು ಚುನಾವಣೆಗೆ ನಿಲ್ಲುವ ಬಗ್ಗೆ ಚರ್ಚೆ ಅಪ್ರಸ್ತುತ. ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಯೋಚನೆ ಮಾಡೋಣ. ನಂತರ ಯಾರು ಅಭ್ಯರ್ಥಿಗಳಾಗಬೇಕು, ಎಲ್ಲಿ ನಿಲ್ಲಬೇಕು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ' ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಮಂಗಳವಾರ ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈಗ ಲೋಕಸಭಾ ಚುನಾವಣೆಯ ಬಗ್ಗೆ ಚಿಂತಿಸುವುದಿಲ್ಲ. ಶೀಘ್ರದಲ್ಲೇ ಜಿ.ಪಂ., ತಾ.ಪಂ. ಮತ್ತು ಬಿಬಿಎಂಪಿ ಚುನಾವಣೆಗಳಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಈ ಚುನಾವಣೆಗಳಿಗೆ ಒಂದಿಷ್ಟು ಕಡೆ ನಮ್ಮ ಶಕ್ತಿ ಇಲ್ಲದೇ ಇದ್ದರೂ, ಸಮರ್ಥ ಅಭ್ಯರ್ಥಿಗಳಿದ್ದಾರೆ. ಎಲ್ಲಾ ಸಮುದಾಯಕ್ಕೂ ಅವಕಾಶ ಕೊಡಬೇಕು. ಪ್ರತಿ ಸಮುದಾಯ ಗುರುತಿಸುವ ಕೆಲಸ ಆಗಬೇಕಿದೆ' ಎಂದು ತಿಳಿಸಿದರು.

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸುತ್ತಿರುವ ಪ್ರಯತ್ನದಲ್ಲಿ ಜೆಡಿಎಸ್ ಕೈ ಜೋಡಿಸಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಜತೆ ಯಾವ ಪಕ್ಷ ಕೈ ಜೋಡಿಸಿಲ್ಲ ತೋರಿಸಿ, ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ ಎಂದು ಸವಾಲು ಹಾಕಿದರು.

Similar News