ಪಕ್ಷ ಸಂಘಟನೆ ಇಲ್ಲದ ಜಿಲ್ಲಾ, ತಾಲೂಕು ಘಟಕಗಳಲ್ಲಿ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

''ಪಕ್ಷವನ್ನು ಮತ್ತೆ ಕಟ್ಟುತ್ತೇವೆ, ಎದೆಗುಂದುವ ಪೈಕಿ ನಾವಲ್ಲ''

Update: 2023-06-09 14:44 GMT

ಬೆಂಗಳೂರು, ಜೂ.9: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶುಕ್ರವಾರ ನಗರದ ಶೇಷಾದ್ರಿಪುರದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ಹೇಳಿದರು.

ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು. ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು ಎಂದು ಅವರು ತಿಳಿಸಿದರು.

ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸಂಘಟನೆ ಬಗ್ಗೆ ನಿರ್ಲಕ್ಷ್ಯ ಸಲ್ಲ, ಅಂಥವರಿಗೆ ಅವಕಾಶ ಇಲ್ಲ. ಎಷ್ಟು ದಿನ  ಇಂಥವರನ್ನು ಸಹಿಸಿಕೊಳ್ಳುವುದು. ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ, ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಸೇರಿದಂತೆ ಆಯಾ ಜಿಲ್ಲೆಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು ಭಾಗಿಯಾಗಿದ್ದರು.

Similar News