ಬೆಂಗಳೂರು | ಆಟೋ ಮತ್ತು ಕಾರಿಗೆ ಕ್ಯಾಂಟರ್ ಢಿಕ್ಕಿ; ಇಬ್ಬರು ಮೃತ್ಯು
ಬೆಂಗಳೂರು, ಸೆ.13: ಹಾಸನದ ದುರಂತ ಮಾಸುವ ಮುನ್ನವೇ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್ ಢಿಕ್ಕಿಯಾಗಿ ಆಟೋದಲ್ಲಿ ಚಲಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ವರದಿಯಾಗಿದೆ.
ಘಟನೆಯಲ್ಲಿ ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ನ ಬ್ರೇಕ್ ವಿಫಲಗೊಂಡು ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಕ್ಯಾಂಟರ್ ಢಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು, ಇದೇ ವೇಳೆಯಲ್ಲಿ ಗರ್ಭಿಣಿ ಪತ್ನಿ ಮತ್ತು 3 ವರ್ಷದ ಮಗುವನ್ನು ವಿಜಯ್ ಎಂಬುವವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.