×
Ad

ಮಾನ್ಯತೆ ಪಡೆಯದ ರಾಜಕೀಯ ಪಕ್ಷಕ್ಕೆ ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್

Update: 2025-10-04 19:22 IST

ಚುನಾವಣಾ ಆಯೋಗ |PTI

ಬೆಂಗಳೂರು, ಅ. 4: ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷಗಳು 3 ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ಜಾರಿಗೊಳಿಸಿದೆ ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಜಗದೀಶ ಜಿ. ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಕ್ಷ, ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ, ಕನ್ನಡ ಚಳವಳಿ ವಾಟಾಳ್ ಪಕ್ಷ, ಕನ್ನಡ ಪಕ್ಷ, ಕರ್ನಾಟಕ ಕಾರ್ಮಿಕರ ಪಕ್ಷ ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಈ ಪಕ್ಷಗಳು 3ವರ್ಷಗಳಿಂದ (2021-22, 23, 24) ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.

ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.

ನೋಟಿಸ್‍ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲ ಪೋಷಕ ದಾಖಲೆಗಳನ್ನು ಅ.14 ರೊಳಗೆ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಬೇಕು.

ಒಂದು ವೇಳೆ ನಿಗದಿತ ದಿನಾಂಕದಂದು ಹಾಜರಾಗಿ ಉತ್ತರ ನೀಡದಿದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಗದೀಶ ಜಿ. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News