×
Ad

‘ಎಸ್.ಐ.ಆರ್ ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ’ : ಮುಖ್ಯ ಚುನಾವಣಾಧಿಕಾರಿಗೆ ರಾಜಕೀಯ ಪಕ್ಷಗಳ ಆಗ್ರಹ

Update: 2026-05-18 20:31 IST

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್.ಐ.ಆರ್) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರಿಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆಗ್ರಹಿಸಿದ್ದಾರೆ.

ಸೋಮವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿದ ವಿ.ಅನ್ಬುಕುಮಾರ್ ಅವರು, ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ಸಮಗ್ರ ಪರಿಷ್ಕರಣೆಯು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳಬೇಕು ಹಾಗೂ ಅನರ್ಹ ಹೆಸರುಗಳನ್ನು ತೆರವುಗೊಳಿಸುವ ಕಾರ್ಯವನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಚುನಾವಣಾ ಸಿಬ್ಬಂದಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅನ್ಬುಕುಮಾರ್ ತಿಳಿಸಿದರು.

ಮತದಾರರು ತಮ್ಮ ವಿವರಗಳನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಪರಿಶೀಲಿಸಿಕೊಳ್ಳಬೇಕು. ಎಸ್‍ಐಆರ್ ಪ್ರಕ್ರಿಯೆ ಅಂಗವಾಗಿ ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ಮೃತ ಮತದಾರರ ಹೆಸರು ಕೈಬಿಡುವುದು, ನಕಲಿ ಹೆಸರುಗಳ ಪರಿಶೀಲನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ 18 ವರ್ಷ ಪೂರ್ಣಗೊಳಿಸಿರುವ ಯುವ ಮತದಾರರನ್ನು ನೋಂದಾಯಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈ ಬಿಡುತ್ತಿರುವ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಸಭೆಯಲ್ಲಿ ಕೆಲವು ದೂರುಗಳು ಸಲ್ಲಿಕೆಯಾದವು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ಬಿಜೆಪಿ ಪಕ್ಷದ ದತ್ತಾತ್ರೀ ಎಸ್., ಜೆಡಿಎಸ್ ಪಕ್ಷದ ಎಚ್.ಎನ್.ದೇವರಾಜ್, ಆಮ್ ಆದ್ಮಿ ಪಾರ್ಟಿಯ ದರ್ಶನ್ ಜೈನ್, ಬಿಎಸ್ಪಿ ಪಕ್ಷದ ಅರುಣ್ ಪ್ರಸಾದ್, ಸಿಪಿಐ(ಎ) ಪಕ್ಷದ ಮುನಿವೆಂಕಟಪ್ಪ ಎಂ.ಪಿ, ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಸರವಣನ್ .ಎಸ್ ಸೇರಿದಂತೆ ಇತರರು ಭಾಗವಹಿಸಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News