‘ಸೂಪರ್ ಎಲ್ ನೀನೋ’ ಎದುರಿಸಲು ಸಜ್ಜಾಗಿ : ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯದಲ್ಲಿ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಯೂ ಆದ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಗುರುವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಚರ್ಚಿಸಿದರು.
ಪ್ರಮುಖವಾಗಿ ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಅವರು ಸೂಚಿಸಿದರು.
ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದ ಅವರು, ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವ ಜತೆಗೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.