ಬೆಂಗಳೂರು : ನಗರದ ಬಿಟಿಎಂ ಲೇಔಟ್ ಬಡಾವಣೆಯಲ್ಲಿನ ಮೆಟ್ರೋ ನಿಲ್ದಾಣಗಳಿಗೆ ಮರುನಾಮಕರಣ ಮಾಡುವಂತೆ ಕೋರಿ ಸಚಿವ ರಾಮಲಿಂಗಾರೆಡ್ಡಿ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಶನಿವಾರ ಸಚಿವರು ಬರೆದಿದ್ದು, ನನ್ನ ಮತ ಕ್ಷೇತ್ರ ಬಿಟಿಎಂ ಲೇಔಟ್ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ/ನಿರ್ಮಾಣ ಹಂತದಲ್ಲಿರುವ ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಆಯಾ ನಿಲ್ದಾಣಗಳು ಇರುವ ಸ್ಥಳೀಯ ಪ್ರದೇಶದ ಹೆಸರು, ಐತಿಹಾಸಿಕ ಹಾಗೂ ಭೌಗೋಳಿಕ ಮಹತ್ವ ಮತ್ತು ಸಾರ್ವಜನಿಕರ ಸಾಮಾನ್ಯ ಅಭಿಪ್ರಾಯವನ್ನು ಪರಿಗಣಿಸಿ ಸೂಕ್ತವಾಗಿ ಮರುನಾಮಕರಣ ಮಾಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳ ಹೆಸರುಗಳು ನಿಲ್ದಾಣ ಇರುವ ನಿಖರ ಸ್ಥಳ ಅಥವಾ ಆ ಪ್ರದೇಶದ ಜನರಿಗೆ ಹೆಚ್ಚು ಪರಿಚಿತವಾಗಿರುವ ಸ್ಥಳೀಯ ಹೆಸರನ್ನು ಪ್ರತಿಬಿಂಬಿಸುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ನಿಲ್ದಾಣದ ಸ್ಥಳವನ್ನು ಗುರುತಿಸುವಲ್ಲಿ ಕೆಲವೊಮ್ಮೆ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಲ್ದಾಣಗಳ ಹೆಸರುಗಳನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ನಿಲ್ದಾಣ ಇರುವ ಸ್ಥಳೀಯ ಪ್ರದೇಶದ ಪ್ರಚಲಿತ ಹೆಸರು, ಸ್ಥಳೀಯವಾಗಿ ಸಾರ್ವಜನಿಕರಿಗೆ ಹೆಚ್ಚು ಪರಿಚಿತವಾಗಿರುವ ಹೆಸರು, ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ, ಪ್ರಯಾಣಿಕರಿಗೆ ನಿಲ್ದಾಣವನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವ ಹೆಸರು ಇಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ.

ಅದರಂತೆ ಪ್ರಸ್ತುತ ಜೆ.ಪಿ.ನಗರ 4ನೇ ಹಂತ ಮೆಟ್ರೋ ನಿಲ್ದಾಣ ಎಂದು ನಾಮಕರಣಗೊಂಡಿರುವ ನಿಲ್ದಾಣವನ್ನು ಎನ್.ಎಸ್.ಪಾಳ್ಯ ಮೆಟ್ರೋ ನಿಲ್ದಾಣ ಎಂದು ಹೆಸರು ಬದಲಾಯಿಸಬೇಕು. ತಾವರೆಕೆರೆ ಮೆಟ್ರೋ ನಿಲ್ದಾಣವನ್ನು ಎಸ್.ಜಿ.ಪಾಳ್ಯ ಮೆಟ್ರೋ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕು. ಡೈರಿ ವೃತ್ತ ಮೆಟ್ರೋ ನಿಲ್ದಾಣದ ಹೆಸರನ್ನು ಲಕ್ಕಸಂದ್ರ ಮೆಟ್ರೋ ನಿಲ್ದಾಣವೆಂದು ಬದಲಾಯಿಸಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor