ಜೂನ್ 1ಕ್ಕೆ ಶಿವಮೊಗ್ಗದಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆ'ಗಳ ಶಂಕುಸ್ಥಾಪನೆ
ಬೆಂಗಳೂರು : ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೂ.1ರಂದು ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ'ಗಳ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಸೋಮವಾರ ಆನ್ಲೈನ್ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಹೀಗಾಗಿ ರಾಜ್ಯ ಸರಕಾರವು ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಗುರಿಯನ್ನು ಹೊಂದಿದೆ ಎಂದರು.
ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕಾಗಿದೆ. ಹೀಗಾಗಿ ಮೇ 29, ಮೇ 30 ಮತ್ತು ಮೇ 31 ರಂದು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಜೂ.1ರಂದು ಶಾಲೆಗೆ ಬರುವ ಮಕ್ಕಳನ್ನು ತಳಿರು ತೋರಣ ಕಟ್ಟಿ, ಮಕ್ಕಳ ಹಬ್ಬವಾಗಿ ಆಚರಿಸಬೇಕಾಗಿದೆ. ಅಲ್ಲದೆ, ಎಸ್ಡಿಎಂಸಿ ಹಾಗೂ ಹಳೆಯ ವಿದ್ಯಾರ್ಥಿಗಳು ಕೈಜೋಡಿಸಿ ಮಕ್ಕಳಿಗಾಗಿ ವಿಶೇಷ ಊಟದ ವ್ಯವಸ್ಥೆ ಮಾಡುವ ಮೂಲಕ ಮಕ್ಕಳಿಗೆ ಶಾಲೆಗೆ ಬರುವ ಉತ್ಸಾಹವನ್ನು ಹೆಚ್ಚಿಸಬೇಕು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ 46,000ಕ್ಕೂ ಹೆಚ್ಚು ಸರಕಾರಿ ಶಾಲೆಗಳಿದ್ದು, ಶಾಲೆಗಳ ಅಭಿವೃದ್ಧಿಗಾಗಿ ಕೇವಲ ಸರಕಾರದ ಅನುದಾನವನ್ನೇ ಕಾಯದೆ, ಸಾರ್ವಜನಿಕರು ಕೈಜೋಡಿಸಬೇಕು. ಹಳೆಯ ವಿದ್ಯಾರ್ಥಿಗಳು, ಉದ್ಯಮಿಗಳು ಹಾಗೂ ದಾನಿಗಳು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ' ಯೋಜನೆಯಡಿ ಆರ್ಥಿಕ ನೆರವು ನೀಡಬಹುದು. ದಾನಿಗಳು 500 ರೂಪಾಯಿಯಿಂದ ಹಿಡಿದು ಕೋಟ್ಯಂತರ ರೂಪಾಯಿವರೆಗೂ ದೇಣಿಗೆ ನೀಡುತ್ತಿದ್ದಾರೆ. ಈ ಅನುದಾನವನ್ನು ಶಾಲೆಗಳಿಗೆ ಸ್ಮಾರ್ಟ್ ಟಿವಿ, ಆರ್.ಓ ಪ್ಲಾಂಟ್, ಶೌಚಾಲಯ ನಿರ್ಮಾಣ, ಫ್ಯಾನ್ ಮತ್ತು ಲ್ಯಾಬ್ ಉಪಕರಣಗಳನ್ನು ಒದಗಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಖಾಸಗಿ ಶಾಲೆಗಳಿಗಿಂತ ಅತ್ಯುತ್ತಮ ಹಾಗೂ ನುರಿತ ಶಿಕ್ಷಕರು ಸರಕಾರಿ ಶಾಲೆಗಳಲ್ಲಿದ್ದಾರೆ ಎಂಬುದನ್ನು ಪೋಷಕರಿಗೆ ಮನವರಿಕೆ ಮಾಡಿ, ದಾಖಲಾತಿ ಹೆಚ್ಚಿಸಬೇಕು. ವಿದ್ಯಾರ್ಥಿಗಳು ಪೌಷ್ಟಿಕಾಂಶ ಹೆಚ್ಚಿಸಲು ಅಜೀಂ ಪ್ರೇಮ್ಜಿ ಫೌಂಡೇಶನ್ ನೆರವಿನೊಂದಿಗೆ ಪ್ರತಿದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತಿದೆ. ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಅನುಕೂಲವಾಗುವಂತೆ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.