×
Ad

ಅಬಕಾರಿ ಇಲಾಖೆಯಲ್ಲಿ ಐತಿಹಾಸಿಕ ಸುಧಾರಣೆ, 16,358 ಕೋಟಿ ರೂ. ಲಾಭ : ಆರ್.ಬಿ.ತಿಮ್ಮಾಪೂರ

Update: 2025-09-02 20:03 IST

ಬೆಂಗಳೂರು, ಸೆ.2: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 16,358 ಕೋಟಿ ಆದಾಯ ಬಂದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಬಂದಿದೆ. 16,290 ಕೋಟಿ ಆದಾಯದ ನಿರೀಕ್ಷೆ ಹೊಂದಲಾಗಿತ್ತು. ಆದರೆ, 16,358 ಕೋಟಿ ಆದಾಯ ಬಂದಿದ್ದು, ನಿರೀಕ್ಷೆಗಿಂತ 68.78 ಕೋಟಿ ಹೆಚ್ಚಾಗಿದೆ ಎಂದು ವಿವರಿಸಿದರು.

ಅಬಕಾರಿ ಇಲಾಖೆಯಲ್ಲಿ ತೆರಿಗೆ ಸಂಗ್ರಹಣೆ ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ಸಿಗದಂತೆ ಸಿಎಲ್7 ಲೈಸನ್ಸ್ ನೀಡುವ ಹಂತಗಳನ್ನು ಕಡಿತಗೊಳಿಸಲಾಗಿದೆ ಎಂದು ಅವರು ಹೇಳಿದರು.

ಇಲಾಖೆಯಲ್ಲಿ ದಕ್ಷತೆಯ ಆಡಳಿತ ಜಾರಿ ಮಾಡಬೇಕೆಂಬುದು ನಮ್ಮ ಸರಕಾರದ ಧ್ಯೇಯ. ಆದರೂ ಕೆಲವು ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದ್ದು, ಅಂತಹ ಅಧಿಕಾರಿಗಳ ಕ್ರಮ ಕೈಗೊಳ್ಳಲಾಗಿದೆ. ಎ ವೃಂದದ 31, ಬಿ ವೃಂದದ 20, 43 ಅಬಕಾರಿ ಸಬ್ ಇನ್ಸ್‍ಪೆಕ್ಟರ್ ಮೇಲೆ ಶಿಸ್ತು ಕ್ರಮ ಚಾಲ್ತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

ಇದರ ಜೊತೆಗೆ ಆಡಳಿತ ಸುಧಾರಣಾ ಆಯೋಗ ನೀಡಿದ ಶಿಫಾರಸುಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುತ್ತಿದೆ. ಒಟ್ಟು 62 ಶಿಫಾರಸ್ಸುಗಳ ಮೇಲೆ ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ ಶೇ.95 ಶಿಫಾರಸುಗಳಿಗೆ ಒಪ್ಪಿಗೆ ನೀಡಿ ಕಾರ್ಯರೂಪಕ್ಕೆ ತರಲು ಆದೇಶಿಸಿದ್ದೇನೆ. ಈಗಾಗಲೇ 13 ಶಿಫಾರಸುಗಳು ಅನುಷ್ಠಾನ ಆಗಿದ್ದು, 49 ಶಿಫಾರಸುಗಳು ಅನುಷ್ಠಾನದ ಹಂತದಲ್ಲಿವೆ ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಅಕ್ರಮ ಮದ್ಯ ಸಾಗಾಣೆ ಮೇಲೆ ಹದ್ದಿನಗಣ್ಣಿಡಲು ಸೂಚಿಸಲಾಗಿದ್ದು, ಗಡಿ ಪ್ರದೇಶಗ¼ ಚೆಕ್ ಪೋಸ್ಟ್‌ನಲ್ಲಿರುವ ಸಿಬ್ಬಂದಿಯನ್ನು 15 ದಿನಗಳಿಗೊಮ್ಮೆ ಬದಲಿಸುತ್ತಿರುವಂತೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದ ಅವರು, ಸಿಎಚ್ ಪೌಡರ್, ಡ್ರಗ್ಸ್ ನಿಯಂತ್ರಣ ಮಾಡುವ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳು ಸಾಕಷ್ಟು ಕ್ರಮವಹಿಸಬೇಕು. ಸಣ್ಣ ಪ್ಯಾಕೇಟ್‍ನಲ್ಲಿ ಸಿಎಚ್ ಪೌಡರ್ ತಂದು, ನೂರಾರು ಲೀಟರ್ ಮದ್ಯ ತಯಾರಿಸುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಯುವಕರ ಆರೋಗ್ಯ, ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್‍ಗೆ ಕಡಿವಾಣ ಹಾಕಬೇಕು. ಎನ್‍ಡಿಪಿಎಸ್ ಕಾಯ್ದೆ ಸಮರ್ಪಕವಾಗಿ, ಮತ್ತಷ್ಟು ಪರಿಣಾಮವಾಗಿ ಜಾರಿಗೊಳಿಸಬೇಕು.ಉಳಿಕೆ ಪರವಾನಗಿಗಳಿದ್ದು, ಅವುಗಳನ್ನು ಹರಾಜು ಮಾಡಬೇಕೆಂಬ ಚಿಂತನೆಯಲ್ಲಿದ್ದೇವೆ ಎಂದೂ ಸಚಿವರು ಉಲ್ಲೇಖಿಸಿದರು.

ಸಭೆಯಲ್ಲಿ ಅಬಕಾರಿ ಆಯುಕ್ತ ವೆಂಕಟೇಶ್, ಅಪರ ಆಯುಕ್ತರಾದ ಮಂಜುನಾಥ್, ನಾಗರಾಜಪ್ಪ, ಸುರೇಶ್, ಎಂಎಸ್‍ಐಎಲ್ ನಿರ್ದೇಶಕ ಚಂದ್ರಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

(ಸಮೀರ್)

..................................

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News