ಧರ್ಮಸ್ಥಳ | ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್ಐಟಿಗೆ ‘ಮಹಿಳಾ ಆಯೋಗ ಪತ್ರ’
ಬೆಂಗಳೂರು : ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ರಾಜ್ಯ ಮಹಿಳಾ ಆಯೋಗವು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.
ಕೇವಲ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211(ಎ), ಬಿಎನ್ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್ಐಟಿ ಮಾಡಬೇಕೆಂಬುದನ್ನು ಸರಕಾರದ ಆದೇಶವು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.
ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ, ಸಾವು ಸಂಭವಿಸಿದ ಕಾರಣದ ಬಗ್ಗೆ, ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ, ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್ಐಟಿ ರಚನೆಯ ಆಯೋಗದ ಕೋರಿಕೆ ಮತ್ತು ನಂತರದ ಸರಕಾರದ ಆದೇಶಕ್ಕೆ ಅನುಗುಣವಾಗಿ ಎಸ್ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು, ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಸಂಘಟನೆಗಳು, ಹೋರಾಟಗಾರರು ಒಟ್ಟುಗೂಡಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದರು.