ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರ ಸಹಿತ 30 ಮಂದಿ ವಿರುದ್ಧ ದೋಷಾರೋಪ ಪಟ್ಟಿ
ಬೆಂಗಳೂರು, ಜೂ. 3: ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ(ಚಾರ್ಜ್ಶೀಟ್) ಸಲ್ಲಿಸಿರುವುದಾಗಿ ವರದಿಯಾಗಿದೆ.
ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಸಹಿತ, ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಾಲ್ಮೀಕಿ ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ ಎಂದು ಸಿಬಿಐ ಮೂಲಗಳಿಂದ ಗೊತ್ತಾಗಿದೆ.
ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಉಸ್ತುವಾರಿಯಲ್ಲಿ ಈ ತನಿಖೆ ನಡೆದಿತ್ತು. ನಂತರ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಇಲಾಖೆಯ ಇತರೆ ಎರಡು ಘಟಕಗಳಿಗೂ ವಿಸ್ತರಿಸಲಾಗಿತ್ತು.
ಮಾಜಿ ಸಚಿವ ಬಿ.ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ಎಂಡಿ ಆಗಿದ್ದ ಪದ್ಮನಾಭ ಜಂಟಿಯಾಗಿ ಈ ವ್ಯವಸ್ಥಿತ ಸಂಚು ರೂಪಿಸಿದ್ದರು. ನಿಗಮದ ಮಾಜಿ ಎಂಡಿ ಮತ್ತು ಅಕೌಂಟ್ಸ್ ಆಫೀಸರ್ ಅವರ ನಕಲಿ ರಬ್ಬರ್ ಸ್ಟಾಂಪ್ ಹಾಗೂ ಸಹಿಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂ. ಪೈಕಿ 89.63 ಕೋಟಿ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ರವಾನಿಸಿ ಕೊನೆಗೆ ನಗದು, ಚಿನ್ನ ಮತ್ತು ಐಷಾರಾಮಿ ಬೆನಾಮಿ ವಾಹನಗಳಾಗಿ ಪರಿವರ್ತಿಸಿಕೊಳ್ಳಲಾಗಿತ್ತು. ಇದಕ್ಕೆ ಬ್ಯಾಂಕ್ ಅಧಿಕಾರಿಗಳೂ ಸಾಥ್ ನೀಡಿದ್ದರು ಎಂದು ಸಿಬಿಐ ಮೂಲಗಳು ತಿಳಿಸಿವೆ.