×
Ad

ಜಿಎಸ್‍ಟಿ ಕಾಯ್ದೆ ಉಲ್ಲಂಘನೆ : 850ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ, ತಂಬಾಕು ಪದಾರ್ಥಗಳು ವಾಣಿಜ್ಯ ತೆರಿಗೆ ಇಲಾಖೆ ವಶಕ್ಕೆ

Update: 2025-09-18 22:38 IST
ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು, ಸೆ.18: ಬೆಂಗಳೂರು ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಜಿಎಸ್‍ಟಿ ಕಾಯ್ದೆ ಉಲ್ಲಂಘಿಸಿದ 850ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ(ದಕ್ಷಿಣ ವಲಯ) ಜಾರಿ ವಿಭಾಗದ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಸೆ.18ರಂದು ವಿಶ್ವಾಸಾರ್ಹ ಮೂಲಗಳಿಂದ ಖಚಿತ ಮಾಹಿತಿಯ ಆಧಾರದಲ್ಲಿ, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡವು ತ್ವರಿತವಾಗಿ ಯಶವಂತಪುರ ರೈಲು ನಿಲ್ದಾಣ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಒಟ್ಟು 850ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಅದರ ಮಾರುಕಟ್ಟೆ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆ ಸಂದರ್ಭದಲ್ಲಿ ಕಮಲಾ ಪಸಂದ್ ಪಾನ್ ಮಸಾಲಾ, ಹನ್ಸ್ ಚಾಪ್, ಚೈನಿ ಫಿಲ್ಟರ್ ತಂಬಾಕು ಹಾಗೂ ಶಿಖರ್ ಪಾನ್ ಮಸಾಲಾ ಎಂಬ ಪ್ರಸಿದ್ಧ ಬ್ರ್ಯಾಂಡ್‍ಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ದಿಲ್ಲಿಯಿಂದ ಬೆಂಗಳೂರಿಗೆ ರೈಲಿನ ಮೂಲಕ ಸಾಗಿಸಲಾಗಿದ್ದು, ಅವುಗಳನ್ನು ಕೆಲವು ಸರಕು ವಾಹನಗಳಲ್ಲಿ ಹಾಗೂ ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿರುವ ಚೀಲಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.

ವಶಪಡಿಸಿಕೊಂಡ ವಸ್ತುಗಳ ಜಿಎಸ್‍ಟಿ ನಿಯಮಾವಳಿ ಉಲ್ಲಂಘನೆಯ ಸ್ವರೂಪವನ್ನು ಖಚಿತಪಡಿಸಲು ಪರಿಶೀಲನಾ ಪ್ರಕ್ರಿಯೆ ಮುಂದುವರಿದಿದೆ. ಪ್ರಾಥಮಿಕ ತನಿಖೆಯಲ್ಲಿ, ಈ ವಸ್ತುಗಳನ್ನು ಜಿಎಸ್‍ಟಿ ನಿಯಮಗಳ ಅನುಸಾರ ಖರೀದಿ ಮಾಡದೇ ಸಾಗಾಟ ಮಾಡಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಸರಕಾರದ ಬೊಕ್ಕಸಕ್ಕೆ ಗಣನೀಯ ಪ್ರಮಾಣದ ರಾಜಸ್ವ ನಷ್ಟ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೂಕ್ತ ದಾಖಲೆಗಳಿಲ್ಲದೆ ಹಾಗೂ ತೆರಿಗೆ ಇನ್ವಾಯ್ಸ್‍ಗಳಿಲ್ಲದೆ ಸರಕುಗಳನ್ನು ಸಾಗಿಸುವ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸದಾ ಕಟಿಬದ್ದವಾಗಿದೆ. ಇಂತಹ ಕಾರ್ಯಾಚರಣೆಗಳು ಸರಕಾರದ ಆದಾಯವನ್ನು ರಕ್ಷಿಸುವುದರ ಜೊತೆಗೆ ಜಿಎಸ್‍ಟಿ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾ ನಕ್ಕೆ ಇಲಾಖೆ ಕೈಗೊಂಡಿರುವ ನಿರಂತರ ಪ್ರಯತ್ನಗಳ ಭಾಗವಾಗಿದೆ ಎಂದು ಬೆಂಗಳೂರು ದಕ್ಷಿಣ ವಲಯದ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News