×
Ad

525 ಪಂಚಾಯಿತಿಗಳಲ್ಲಿ ‘ನೀರಿದ್ದರೆ ನಾಳೆ’ ಯೋಜನೆ ಅನುಷ್ಠಾನ: ನಾಳೆ(ಅ.9) ಚಾಲನೆ

ನಟ ವಸಿಷ್ಟಸಿಂಹ ಜಾಗೃತಿ ಅಭಿಯಾನದ ರಾಯಭಾರಿ : ಸಚಿವ ಎನ್.ಎಸ್.ಭೋಸರಾಜು

Update: 2025-10-08 22:55 IST

 ಎನ್.ಎಸ್.ಭೋಸರಾಜು

ಬೆಂಗಳೂರು ಅ.8: ರಾಜ್ಯದ 15 ಜಿಲ್ಲೆಗಳ 27 ತಾಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 525 ಗ್ರಾಮ ಪಂಚಾಯಿತಿಗಳಲ್ಲಿ ‘ನೀರಿದ್ದರೆ ನಾಳೆ’ ಎಂಬ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ನಾಳೆ(ಅ.9) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡ ಚಲನಚಿತ್ರ ನಟ ವಸಿಷ್ಟಸಿಂಹ ಅವರನ್ನು ನೀರಿದ್ದರೆ ನಾಳೆ ಯೋಜನೆಯ ಜಾಗೃತಿ ಅಭಿಯಾನದ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಈ ಯೋಜನೆ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ನೀರಿದ್ದರೆ ನಾಳೆ ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಅವರು ಹೇಳಿದರು.

ನೀರಿದ್ದರೆ ನಾಳೆ ಎಂಬ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಭೋಸರಾಜು ತಿಳಿಸಿದರು.

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದು ಭೋಸರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಕೆ.ಪವಿತ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News