ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ದೇಶದ ಪ್ರಗತಿಯೊಂದಿಗೆ ನಾವೂ ಬೆಳೆಯಬೇಕು : ಡಾ.ಭಗವಾನ್ ಬಿ. ಸಿ.
ಬೆಂಗಳೂರು : ಭಾರತವು ಆರ್ಥಿಕ ಬೆಳವಣಿಗೆ, ತಾಂತ್ರಿಕ ಪ್ರಗತಿ, ಆರೋಗ್ಯ, ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಶರವೇಗದ ಪ್ರಗತಿ ಸಾಧಿಸುತ್ತಿದೆ. ದೇಶವು ಅಭಿವೃದ್ಧಿಯ ಹೊಸ ಹಂತದತ್ತ ಮುನ್ನಡೆಯುತ್ತಿರುವ ಸಂದರ್ಭದಲ್ಲಿ, ನಾವು ಕೂಡ ನಮ್ಮ ಕಾರ್ಯಕ್ಷಮತೆ, ವೇಗ ಮತ್ತು ಗುಣಮಟ್ಟವನ್ನು ಹೆಚ್ಚಿಸಿಕೊಂಡು ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯವು ಕೇವಲ ಆಚರಣೆಯ ದಿನವಲ್ಲ; ಪ್ರತಿಯೊಬ್ಬ ನಾಗರಿಕನೂ ದೇಶದ ಅಭಿವೃದ್ಧಿಯಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕಾದ ಹೊಣೆಯನ್ನು ಅರಿತುಕೊಳ್ಳಬೇಕಾದ ದಿನವೂ ಆಗಿದೆ ಎಂದು ಹೇಳಿದರು.
ಭಾರತವು ಇಂದು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದ್ದು, ತಂತ್ರಜ್ಞಾನ, ಡಿಜಿಟಲ್ ಕ್ಷೇತ್ರ, ಬಾಹ್ಯಾಕಾಶ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಹಾಗೂ ನವೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇಂತಹ ಮಹತ್ವದ ಬೆಳವಣಿಗೆಯ ಸಂದರ್ಭದಲ್ಲಿ RGUHS ಕೂಡ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಹೆಜ್ಜೆ ಹಾಕಬೇಕು. ಆರೋಗ್ಯ ವಿಜ್ಞಾನ ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ವಿಕಸಿತ ಭಾರತ (Viksit Bharat) ನಿರ್ಮಾಣಕ್ಕೆ ವಿಶ್ವವಿದ್ಯಾಲಯ ತನ್ನದೇ ಆದ ಮಹತ್ವದ ಕೊಡುಗೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ನವೀನತೆ ಮತ್ತು ಶ್ರೇಷ್ಠತೆಯನ್ನು ಅಳವಡಿಸಿಕೊಂಡು, ಗುಣಮಟ್ಟದ ಆರೋಗ್ಯ ವಿಜ್ಞಾನ ಶಿಕ್ಷಣವನ್ನು ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಉತ್ತೇಜಿಸುವುದರ ಜೊತೆಗೆ, ಸಂಶೋಧನೆ ಮತ್ತು ನವೋದ್ಯಮಕ್ಕೆ ಪೂರಕ ವಾತಾವರಣ ನಿರ್ಮಿಸುವ ಕೆಲಸ ನಡೆದಿದೆ. ಬದಲಾಗುತ್ತಿರುವ ಜಾಗತಿಕ ಆರೋಗ್ಯ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಅವರು ದೇಶದ ಭವಿಷ್ಯದ ಆರೋಗ್ಯ ವ್ಯವಸ್ಥೆಯ ನಿರ್ಮಾತೃಗಳಾಗುವಂತೆ ರೂಪಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ವಿಶ್ವವಿದ್ಯಾಲಯದ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ, ಬೋಧಕ, ವಿದ್ಯಾರ್ಥಿ ಹಾಗೂ ಸಂಬಂಧಿತ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ RGUHSನ ಪ್ರಗತಿಗೆ ಕೊಡುಗೆ ನೀಡಬೇಕು. ಸಾಮೂಹಿಕ ಹೊಣೆಗಾರಿಕೆ, ಶಿಸ್ತು, ಪಾರದರ್ಶಕತೆ ಮತ್ತು ಸೇವಾ ಮನೋಭಾವ ವಿಶ್ವವಿದ್ಯಾಲಯದ ಕಾರ್ಯವೈಖರಿಯ ಪ್ರಮುಖ ಅಂಶಗಳಾಗಬೇಕು ಎಂದು ಅವರು ಹೇಳಿದರು.
ಮುಂದಿನ ಪೀಳಿಗೆಯನ್ನು ಕೇವಲ ವೃತ್ತಿಪರರನ್ನಾಗಿ ರೂಪಿಸುವುದಷ್ಟೇ ಅಲ್ಲದೆ, ದೇಶದ ಅಭಿವೃದ್ಧಿಯ ಬಗ್ಗೆ ಬದ್ಧತೆ ಹೊಂದಿರುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಅಗತ್ಯವಿದೆ. ಜ್ಞಾನ, ಕೌಶಲ್ಯ, ಸಂಶೋಧನಾ ಮನೋಭಾವ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮೂಲಕ ವಿದ್ಯಾರ್ಥಿಗಳನ್ನು ವಿಕಸಿತ ಭಾರತದ ನಿರ್ಮಾಣದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್ ಒಡೆಯರ್, ಮೌಲ್ಯಮಾಪನ ಕುಲಸಚಿವ ಡಾ.ರಿಯಾಜ್ ಬಾಷಾ ಹಾಗೂ ಹಣಕಾಸು ಅಧಿಕಾರಿ ಗಂಗಾಧರ್ ಬಿ.ಕೆ. ಉಪಸ್ಥಿತರಿದ್ದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಿಂಡಿಕೇಟ್ ಹಾಗೂ ಸೆನೆಟ್ನ ಕೆಲವು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.