ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯರಿಗೆ ಏನೂ ಮಾಡಲೂ ಸಾಧ್ಯವಿಲ್ಲ : ಬೈರತಿ ಸುರೇಶ್
ವಿಜಯಪುರ : ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಗುರುವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಸೇರಿದಂತೆ ಕೆಲವು ಸುಳ್ಳು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮತ್ತು ಇತರರು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಸಿದರು. ಆದರೆ, ಅದು ಸಾಕಾರಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ರಾಜ್ಯವಷ್ಟೇ ಅಲ್ಲ, ಇಡೀ ದೇಶ ಕಂಡ ಅತ್ಯಂತ ಪ್ರಾಮಾಣಿಕ ರಾಜಕೀಯ ನೇತಾರರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 16 ಬಾರಿ ಬಜೆಟ್ ಅನ್ನು ಮಂಡಿಸುವ ಮೂಲಕ ತಳ ವರ್ಗದ ಸಮುದಾಯಗಳೂ ಸೇರಿದಂತೆ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ಕೊಡುಗೆ ನೀಡಿದ್ದಾರೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಇದರರ್ಥ ನಮ್ಮ ಕಾಂಗ್ರೆಸ್ ಸರಕಾರ ಜನಪರ ಯೋಜನೆಗಳನ್ನು ನೀಡಿ ಜನರಿಗಾಗಿ ಸೇವೆ ಸಲ್ಲಿಸುತ್ತಿರುವ ಸರಕಾರವಾಗಿದೆ ಎಂದು ಸುರೇಶ್ ತಿಳಿಸಿದರು.