‘ಎಸ್ಟಿಪಿ ಘಟಕಕ್ಕೆ ಭೂಮಿ’ | ಪರಿಹಾರ ಹೆಚ್ಚಳ ಮಾಡುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ : ಬೈರತಿ ಸುರೇಶ್
ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ನೀಡಿರುವ ಭೂಮಾಲಕರಿಗೆ ಪರಿಹಾರವನ್ನು ಹೆಚ್ಚಳ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಚಿವರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬುಧವಾರ ವಿಧಾನಸೌಧದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ, ಆರ್ಥಿಕ ಮತ್ತು ನಗರ ನೀರು ಸರಬರಾಜು ಇಲಾಖೆ ಉನ್ನತಾಧಿಕಾರಿಗಳ ಸಭೆಯನ್ನು ಬೈರತಿ ಸುರೇಶ್ ನಡೆಸಿದರು.
ಬೆಳಗಾವಿ ನಗರದಲ್ಲಿ 70 ದಶಲಕ್ಷ ಲೀಟರ್ ಸಾಮಥ್ರ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಹಲಗಾ ಗ್ರಾಮದ 17 ಎಕರೆ 37 ಗುಂಟೆ ಮತ್ತು ಬೆಳಗಾವಿಯ 1 ಎಕರೆ ಮತ್ತು 12 ಗುಂಟೆ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಹತ್ತು ವರ್ಷಗಳ ಹಿಂದೆ ಒಟ್ಟು 19 ಎಕರೆ 9 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಪರಿಹಾರವನ್ನೂ ಘೋಷಣೆ ಮಾಡಲಾಗಿತ್ತು.
ಆದರೆ, ಅಂದು ಸರಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ಭೂಮಾಲಕರು ಒಪ್ಪದ ಕಾರಣ ನ್ಯಾಯಾಲಯದಲ್ಲಿ ಪರಿಹಾರದ ಮೊತ್ತವನ್ನು ಜಮಾ ಮಾಡಲಾಗಿತ್ತು. ಅಲ್ಲದೇ, ಸರಕಾರದ ಭೂಸ್ವಾಧೀನ ಪ್ರಕ್ರಿಯೆ ಕ್ರಮಬದ್ಧವಾಗಿದೆ ಎಂದು ಹೈಕೋರ್ಟ್ ಸರಕಾರದ ಪರವಾಗಿ ತೀರ್ಪು ನೀಡಿತ್ತು. ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್, ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿರುವ ರೈತರ ಬಗ್ಗೆ ತಮಗೆ ಮತ್ತು ಸರಕಾರಕ್ಕೆ ಸಹಾನುಭೂತಿ ಇದೆ. ರೈತರ ಹಿತರಕ್ಷಣೆ ಜೊತೆ ಜೊತೆಯಲ್ಲೆ ಬೆಳಗಾವಿ ನಗರದ ನೈರ್ಮಲ್ಯ ಕಾಪಾಡುವುದೂ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿಯಮಾವಳಿಯಲ್ಲಿ ಅವಕಾಶವಿದ್ದರೆ ಪರಿಹಾರ ಹೆಚ್ಚಳ ಮಾಡಬಹುದಾಗಿದೆ ಎಂದರು.
ಇದೇ ವೇಳೆ, ಅಧಿಕಾರಿಗಳು ಹತ್ತು ವರ್ಷಗಳ ಹಿಂದೆಯೆ ಪರಿಹಾರ ಘೋಷಣೆ ಮಾಡಿರುವುದರಿಂದ ಮತ್ತೆ ಪರಿಷ್ಕರಣೆ ಮಾಡಲು ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಎಸ್ಟಿಪಿ ಘಟಕವನ್ನು ಸ್ಥಾಪನೆ ಮಾಡದಿದ್ದರೆ ನಾಗರಿಕರು ಮಲಿನ ನೀರನ್ನು ಬಳಸಬೇಕಾಗುತ್ತದೆ. ತ್ವರಿತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಮತ್ತು ಪರಿಹಾರ ಹೆಚ್ಚಳದ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯ ಮುಂದಿಟ್ಟು ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ತಮ್ಮ ಮತಕ್ಷೇತ್ರದ ರೈತರು ಜಮೀನನ್ನು ನೀಡಿದ್ದಾರೆ. ಅವರಿಗೆ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದರು.
ಸಚಿವ ಸಂಪುಟ ಸಭೆಗೆ ಹೊಣೆ: ಇದೊಂದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಿಯಮಾವಳಿಯಲ್ಲಿ ಪರಿಹಾರ ಹೆಚ್ಚಳಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಪರಿಹಾರ ಹೆಚ್ಚಳದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಸುರೇಶ್ ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆರ್ಥಿಕ ಇಲಾಖೆ (ವೆಚ್ಚ) ಕಾರ್ಯದರ್ಶಿ ರೇಜು, ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.