×
Ad

ಬಿಡಿಸಿಸಿ ಬ್ಯಾಂಕ್ ಚುನಾವಣೆ : 18 ಕ್ಷೇತ್ರಗಳ ಪೈಕಿ 15 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು

Update: 2025-12-07 23:08 IST

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ 15 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ನಗರದ ಬಿಡಿಸಿಸಿ ಬ್ಯಾಂಕ್‍ನಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಬಿಡಿಸಿಸಿ ಬ್ಯಾಂಕ್ ಚುನಾವಣೆ ನಡೆದಿದ್ದು, 18 ಕ್ಷೇತ್ರಗಳ ಪೈಕಿ 15ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನೇರವಾಗಿ ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.

ಬೆಂಗಳೂರು ಉತ್ತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 1, ಆನೇಕಲ್‍ನಲ್ಲಿ 1, ಬೆಂಗಳೂರು ಉತ್ತರ ಕ್ಷೇತ್ರದಿಂದ 1 ಕ್ಷೇತ್ರದಲ್ಲಿ ಹಾಗೂ ಎಚ್.ಎಂ ರೇವಣ್ಣ ಅವರ ಸಹಕಾರದಿಂದ 1 ಸೇರಿ, ಇತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಮಾಹಿತಿ ನೀಡಿದರು.

ನೆಲಮಂಗಲ ಹಾಗೂ ಸೋಲೂರು ಕ್ಷೇತ್ರಗಳ 2 ಸ್ಥಾನಗಳನ್ನು ಬಿಜೆಪಿ ಸಹಕಾರದೊಂದಿಗೆ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಕೆ.ಎಚ್ ಮುನಿಯಪ್ಪ, ಕೃಷ್ಣ ಭೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ವೆಂಕಟರಮಣಪ್ಪ ಮತ್ತಿತರ ಮುಖಂಡರ ಸಹಕಾರದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿದೆ ಎಂದರು.

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬಹಳ ಇತಿಹಾಸ ಇರುವ ಬ್ಯಾಂಕ್. ರಾಜಧಾನಿಯಲ್ಲಿರುವ ರಾಜ್ಯದ ಗಮನ ಸೆಳೆಯುವ ಬ್ಯಾಂಕ್ ಇದಾಗಿದ್ದು, ಅನೇಕ ಏಳು ಬೀಳು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬ್ಯಾಂಕ್ ಉತ್ತಮ ಆಡಳಿತ ನಡೆಸಿಕೊಂಡು ಬಂದಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಟ್ಟು 36 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿರುವ ಬ್ಯಾಂಕ್ ಇದಾಗಿದೆ ಎಂದರು.

ಬಿಡಿಸಿಸಿ ಬ್ಯಾಂಕ್ ಅನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಈ ಬ್ಯಾಂಕ್ ವ್ಯಾಪ್ತಿಗೆ ಬರುವ ರೈತರು ಹಾಗೂ ನಾಗರಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನಮ್ಮ ಆಡಳಿತ ಮಂಡಳಿ ನೀಡಲಿದೆ ಎಂದು ಭರವಸೆ ನೀಡಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News