Bengaluru | ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು; ನಾಗಪುರದಲ್ಲಿ ಪತಿಯೂ ಆತ್ಮಹತ್ಯೆ!
ಬೆಂಗಳೂರು : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸಾವನ್ನಪ್ಪಿದ ಬಳಿಕ, ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದ ಆಕೆಯ ಪತಿ ಸೂರಜ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗಪುರದಲ್ಲಿ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ತಾಯಿ ಜಯಂತಿ ಸಹ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 29ರಂದು ಗಾನವಿ ಹಾಗೂ ಸೂರಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್ಗೆಂದು ತೆರಳಿದ್ದ ದಂಪತಿ, ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಡಿ.21ರ ರವಿವಾರ ಮನೆಗೆ ವಾಪಸ್ಸಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದರು. ನಂತರ ಮನೆಯಲ್ಲಿ ಜಗಳವಾದ ಹಿನ್ನೆಲೆಯಲ್ಲಿ, ಗಾನವಿಯನ್ನು ಆಕೆಯ ಪೋಷಕರು ತವರು ಮನೆಗೆ ಕರೆತಂದಿರುವುದಾಗಿ ಹೇಳಿದ್ದರು.
ಬಳಿಕ ಡಿ.24ರ ಬುಧವಾರ ಮಧ್ಯಾಹ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯನ್ನು ಪೋಷಕರು ರಕ್ಷಿಸಿ ರಾಮಮೂರ್ತಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು ಗಾನವಿಯ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದರು. ವೆಂಟಿಲೇಟರ್ನಲ್ಲಿ ಇರಿಸಿದ್ದ ಗಾನವಿ ಚಿಕಿತ್ಸೆಗೆ ಸ್ಪಂದಿಸದೆ, ಡಿ.25ರ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಈ ಬಗ್ಗೆ ಸೂರಜ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ಗಾನವಿ ಪೋಷಕರು ದೂರು ನೀಡಿದ್ದರು. ಘಟನೆ ಬೆನ್ನಲ್ಲೇ, ಸೂರಜ್, ಅವರ ತಾಯಿ ಜಯಂತಿ ಮತ್ತು ಸೂರಜ್ ಸಹೋದರ ಸಂಜಯ್ ನಾಗಪುರಕ್ಕೆ ತೆರಳಿದ್ದರು. ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸೂರಜ್ ಸಾವನ್ನಪ್ಪಿದ್ದು, ಅವರ ತಾಯಿ ಜಯಂತಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೂರಜ್ ಡಿ.26ರ ಶುಕ್ರವಾರ ನಾಗಪುರದ ರಾಯಲ್ ವಿಲ್ಲಾದಲ್ಲಿ ಉಳಿದುಕೊಂಡಿದ್ದರು. ಅಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಸೆ ಗಾನವಿ ಆತ್ಮಹತ್ಯೆ ಮಾಡಿಕೊಂಡ ನಂತರ ಮತ್ತು ಆಕೆಯ ಪೋಷಕರು ಇವರ ವಿರುದ್ಧ ದೂರು ದಾಖಲಿಸಿದ ಹಿನ್ನೆಲೆಯಲ್ಲಿ, ಇವರಿಬ್ಬರೂ ಭಯಭೀತರಾಗಿದ್ದರು. ಆ ಕಾರಣಕ್ಕಾಗಿಯೇ ಅವರು ನಾಗಪುರಕ್ಕೆ ಬಂದು ತಂಗಿದ್ದರು.
-ನಿತಿನ್ ಮಗರ್, ಇನ್ಸ್ಪೆಕ್ಟರ್, ಸೋನೆಗಾಂವ್ ಪೊಲೀಸ್ ಠಾಣೆ, ನಾಗಪುರ.