ಪ್ರಧಾನ ಮಂತ್ರಿಗಳೇ, ನಂದನ್ ನಿಲೇಕಣಿಗೆ ಈಗ ಏಕಾಏಕಿ 'ಗುರುತು' ದೊರಕಿದೆಯೇ?: ಬಿ.ಕೆ.ಹರಿಪ್ರಸಾದ್

Update: 2026-07-27 13:44 IST

ಬಿ.ಕೆ.ಹರಿಪ್ರಸಾದ್

ಬೆಂಗಳೂರು: ನಿಂದಿಸಿದವರನ್ನೇ ನೆಚ್ಚಿಕೊಳ್ಳುವುದು ಪ್ರಧಾನಿ ನರೇಂದ್ರ ಮೋದಿಗೂ , ಬಿಜೆಪಿಗೂ ಹೊಸದೇನಲ್ಲ. 'ಗುರುತೇ ಇಲ್ಲದ ಕೋಟ್ಯಧಿಪತಿ' ಎಂದು ಚುನಾವಣಾ ವೇದಿಕೆಯಲ್ಲಿ ನಂದನ್ ನಿಲೇಕಣಿಯವರನ್ನು ವೈಯಕ್ತಿಕವಾಗಿ ಅವಹೇಳನ ಮಾಡಿದ್ದನ್ನು ಪ್ರಧಾನಿ ಮರೆತಿರಬಹುದು, ದೇಶದ ಜನ ಮರೆತಿಲ್ಲ. ನಂದನ್ ನಿಲೇಕಣಿಯವರಿಗೆ ಈಗ ಏಕಾಏಕಿ 'ಗುರುತು' ದೊರಕಿದೆಯೇ? ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಲೇಕಣಿ ರೂಪಿಸಿದ ಆಧಾರ್ ಯೋಜನೆಯನ್ನು ‘ಸಾರ್ವಜನಿಕ ಹಣದ ಲೂಟಿ’, ‘ವ್ಯರ್ಥ ಯೋಜನೆ’, ‘ರಾಷ್ಟ್ರೀಯ ಭದ್ರತೆಗೆ ಅಪಾಯ’ ಎಂದು ಅಪಪ್ರಚಾರ ಮಾಡಿದ್ದವರು ಇದೇ ಬಿಜೆಪಿ ನಾಯಕರು. ಆದರೆ ಇಂದು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸರಿಪಡಿಸುವ ಉನ್ನತಾಧಿಕಾರ ಸಮಿತಿಯ ಚುಕ್ಕಾಣಿಯನ್ನು ಅದೇ ನಂದನ್ ನಿಲೇಕಣಿಯವರ ಕೈಗೆ ಒಪ್ಪಿಸಿದ್ದಾರೆ ಎಂದು ಹೇಳಿದರು.

ಪ್ರಧಾನ ಮಂತ್ರಿಗಳೇ, ನಂದನ್ ನಿಲೇಕಣಿಯವರಿಗೆ ಈಗ ಏಕಾಏಕಿ 'ಗುರುತು' ದೊರಕಿದೆಯೇ? ಅಥವಾ ನೀವು ಹಿಂದೆ ಮಾಡಿದ್ದ ಆರೋಪಗಳಿಗೇ ಇಂದು ಗುರುತೇ ಉಳಿದಿಲ್ಲವೇ? ಅಂದಿನ ಆರೋಪಗಳು ಸತ್ಯವಾಗಿದ್ದರೆ, ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅವರ ಕೈಗೆ ಒಪ್ಪಿಸಿರುವುದು ಏಕೆ? ಹಿಂದಿನ ಆರೋಪಗಳು ಸುಳ್ಳಾಗಿದ್ದರೆ, ಸಾರ್ವಜನಿಕ ವೇದಿಕೆಯಲ್ಲಿ ಒಬ್ಬ ಸಾಧಕನ ವಿರುದ್ಧ ನಡೆಸಿದ ವೈಯಕ್ತಿಕ ಅವಹೇಳನಕ್ಕಾಗಿ ಕ್ಷಮೆ ಕೇಳುವುದು ಯಾವಾಗ? ಎಂದು ಪ್ರಶ್ನಿಸಿದರು.

ವಿರೋಧ ಪಕ್ಷದೊಂದಿಗೆ ಗುರುತಿಸಿಕೊಂಡಾಗ ದೇಶದ ಪ್ರತಿಭೆಯನ್ನು ಅವಮಾನಿಸುವುದು; ತಮ್ಮ ಆಡಳಿತದ ವೈಫಲ್ಯವನ್ನು ಸರಿಪಡಿಸಬೇಕಾದಾಗ ಅದೇ ಪ್ರತಿಭೆಯ ಬಾಗಿಲು ತಟ್ಟುವುದು ಇದು ನಾಯಕತ್ವವಲ್ಲ, ಅವಕಾಶವಾದದ ಅಶ್ಲೀಲ ಪ್ರದರ್ಶನ. ನಂದನ್ ನಿಲೇಕಣಿಯವರ ಸಾಮರ್ಥ್ಯದ ಬಗ್ಗೆ ನಮಗೆ ಪ್ರಶ್ನೆಯಿಲ್ಲ. ಪ್ರಶ್ನೆ ಇರುವುದು ನರೇಂದ್ರ ಮೋದಿಯವರ ರಾಜಕೀಯ ಪ್ರಾಮಾಣಿಕತೆಯ ಬಗ್ಗೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸರಿಪಡಿಸಲು ಸಮಿತಿ ನೇಮಿಸುವ ಮೊದಲು, ನಿಮ್ಮ ಹಿಂದಿನ ಆರೋಪಗಳ ಪರೀಕ್ಷೆಗೆ ಉತ್ತರಿಸಿ ಪ್ರಧಾನಿಗಳೇ ಎಂದು ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News