2 ವರ್ಷಗಳಲ್ಲಿ 165 ಎಕರೆ ಬಿಎಂಟಿಸಿ ಆಸ್ತಿಯ ಒತ್ತುವರಿ ತೆರವು

Update: 2026-08-08 22:18 IST

ಬೆಂಗಳೂರು : ಬಿಎಂಟಿಸಿ ಸ್ವತ್ತಾಗಿರುವ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಹಿಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 165 ಎಕರೆ ಭೂಮಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ.

ಶನಿವಾರ ಈ ಸಂಬಂಧ ಮಾಧ್ಯಮ ಪ್ರಕಟನೆ ಹೊರಡಿಸಿರುವ ಬಿಎಂಟಿಸಿ, ತನ್ನ ವ್ಯಾಪ್ತಿಯಲ್ಲಿ ಹೊಂದಿರುವ ಅಮೂಲ್ಯ ಸ್ಥಿರಾಸ್ತಿಗಳನ್ನು ಸಂರಕ್ಷಿಸುವುದು ಹಾಗೂ ಸಂಸ್ಥೆಯ ಭೂಮಿಯ ಮೇಲೆ ಯಾವುದೇ ರೀತಿಯ ಅಕ್ರಮ ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಸಂಸ್ಥೆಯ ಪ್ರಮುಖ ಆದ್ಯತೆಗಳಲ್ಲೊಂದಾಗಿದೆ. ಈ ಹಿನ್ನೆಲೆಯಲ್ಲಿ, ಸಂಸ್ಥೆಯ ಭೂಮಿಗಳಲ್ಲಿ ಕಂಡುಬಂದಿದ್ದ ಒತ್ತುವರಿಗಳನ್ನು ಗುರುತಿಸಿ, ದಾಖಲೆಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ಹಂತ ಹಂತವಾಗಿ ತೆರವು ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದೆ.

ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅಕ್ರಮವಾಗಿ ಸಂಸ್ಥೆಯ ಭೂಮಿಯನ್ನು ಆಕ್ರಮಿಸಿಕೊಂಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10 ಪ್ರಕರಣಗಳನ್ನು ದಾಖಲಿಸಲಾಗಿದ್ದು, 40 ಜನ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಹೇಳಿದೆ.

ಹಿಂದಿನ ಎರಡು ವರ್ಷಗಳಲ್ಲಿ ಸಂಸ್ಥೆಯ ವತಿಯಿಂದ ಕೈಗೊಳ್ಳಲಾದ ಕಾರ್ಯಾಚರಣೆಗಳಲ್ಲಿ ಹಂಚರಹಳ್ಳಿ (ಮಂಡೂರು), ಹುಚ್ಚನಪಾಳ್ಯ (ದಾಸನಪುರ), ಹಿರಂಡಹಳ್ಳಿ (ಹೊಸಕೋಟೆ), ಕೆಂಗೇರಿ, ತೋಟಗೆರೆ (ಹೆಸರಘಟ್ಟ), ಭೈರತಿ ಹಾಗೂ ಕಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿದ್ದ ಬಿಎಂಟಿಸಿ ಭೂಮಿಯನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News