ಚಾರ್ಜ್ಶೀಟ್ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೊಂಡಿದ್ದು, ಚಾರ್ಜ್ಶೀಟ್ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ" ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್ಗು ಚಾರ್ಜ್ಶೀಟ್ ನೀಡಲಾಗುತ್ತದೆ. ಚಾರ್ಜ್ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ಶೀಟ್ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.
ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ಹೇಳಿದರು.