×
Ad

ಕೇಂದ್ರ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Update: 2026-06-12 21:24 IST

ಹೊಸದಿಲ್ಲಿ : ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್ ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ.ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ ಅನ್ವಯ ಅಧಿಸೂಚನೆ, ಮಹದಾಯಿ ನೀರು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರದ 5,300 ಕೋಟಿ ರೂ. ಅನುದಾನ ವಿಚಾರವಾಗಿ ಪ್ರಸ್ತಾಪಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಪ್ರಧಾನಮಂತ್ರಿಗೆ ನೀಡಿರುವ ಮನವಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೃಷಿ, ನೀರಾವರಿ, ನಗರಾಭಿವೃದ್ಧಿ, ಸಂಚಾರ ವಿಚಾರಗಳಿಗೆ ಸಂಬಂಧಿಸಿದಂತೆ ಮನವಿ ಮಾಡಲಾಗಿದೆ. ಅವರು ಪರಿಶೀಲಿಸಿ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ನಮ್ಮ ಬಳಿ ಸಂಖ್ಯಾಬಲವಿತ್ತು. ಕರ್ನಾಟಕದ ಜನತೆ ನಮಗೆ ಸಂಖ್ಯಾಬಲದ ಆಶೀರ್ವಾದ ನೀಡಿದ್ದರು, ಆ ಸಂಖ್ಯಾಬಲವೆ ಈಗ ಫಲ ನೀಡಿದೆ ಎಂದರು. ಅಲ್ಲದೆ, ಸಂಪುಟ ವಿಸ್ತರಣೆ ಕುರಿತು ‘ಮುಂದಿನ ದಿನಗಳಲ್ಲಿ ನೋಡೋಣ’ ಎಂದು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News