ಮೆಟ್ರೊ ಲೈನ್ನಲ್ಲಿ ಅಂತಿಮ ಗಮ್ಯಸ್ಥಾನಕ್ಕೆ ಹೆಚ್ಚಿನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ
ಬೆಂಗಳೂರು, ಅ.10: ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಬೇಕಾಗಿದೆ. ಹೀಗಾಗಿ ನಮ್ಮ ಮೆಟ್ರೊ ಲೈನ್ನಲ್ಲಿ ಅಂತಿಮ ಗಮ್ಯಸ್ಥಾನಕ್ಕೆ ಹೆಚ್ಚಿನ ಸಂಪರ್ಕವನ್ನು(ಲಾಸ್ಟ್ ಮೈಲ್ ಕನೆಕ್ಟಿವಿಟಿ) ಕಲ್ಪಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರದಂದು ಇಲ್ಲಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಆಯೋಜಿಸಿದ್ದ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ’ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂತಿಮ ಗಮ್ಯಸ್ಥಾನಕ್ಕೆ ಸಂಪರ್ಕವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚು ಮೆಟ್ರೋ ಫೀಡರ್ ಬಸ್ಸುಗಳನ್ನು ನಿಯೋಜನೆ ಮಾಡಬೇಕು ಎಂದರು.
ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು, ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40ಕೋಟಿ ಇದೆ. ಇಂತಹ ಬೃಹತ್ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊ ರೇಶನ್ ರಚನೆ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನೂ ನೀಡಿತ್ತು. ಆದರೆ ನಂತರ ಬಂದ ಸರಕಾರಗಳಲ್ಲಿ ಈ ಕುರಿತು ಯಾವುದೇ ತೀರ್ಮಾನ ಆಗಿರಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನರ್ರಚನೆ ಮಾಡಲಾಯಿತು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ಕಾನೂನು ತಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಬಿಜಿಎ) ರಚಿಸಿದ್ದೇವೆ. ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ ಎಂದು ಅವರು ವಿವರಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮೇ 15ರಂದು ಜಾರಿಗೆ ಬಂತು. ಜನರಿಗೆ ಪೂರಕವಾದ, ಅವರ ಆಶೋತ್ತರಗಳನ್ನು ಈಡೇರಿಸುವ ಆಡಳಿತ ನೀಡುವ ಉದ್ದೇಶದಿಂದ ಪ್ರಜಾಪ್ರಭುತ್ವದ ಆಶಯಕ್ಕೆ ಅನುಗುಣವಾಗಿ ಬಿಜಿಎ ರಚಿಸಿದ್ದೇವೆ. ಇದರಿಂದ ಅಧಿಕಾರದ ವಿಕೇಂದ್ರೀಕರಣ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರಾಧಿಕಾರ ಮುಂದಿನ ದಿನಗಳಲ್ಲಿ ಬೆಂಗಳೂರಿನ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಸಮರ್ಪಕ ಕಸ ವಿಲೇವಾರಿ, ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ, ಚರಂಡಿ ವ್ಯವಸ್ಥೆ ಚೆನ್ನಾಗಿರುವಂತೆ ಮಾಡಬೇಕು. ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಎಲ್ಲ ಐದು ನಗರ ಪಾಲಿಕೆಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಈ ಎಲ್ಲ ಕಾರ್ಯಕ್ಕೆ ಸರಕಾರದ ಜೊತೆಗೆ ಸಮನ್ವಯ ಅಗತ್ಯ. ಮುಂದಿನ ದಿನಗಳಲ್ಲಿ ಬಿಡಿಎ, ಬಿಡಬ್ಲುಎಸ್ಎಸ್ಬಿ, ಬೆಸ್ಕಾಂ, ಬಿಎಂಆರ್ಸಿಎಲ್ನಂತಹ ಸಂಸ್ಥೆಗಳು ಸೇರಿ ಎಲ್ಲ ಸಂಬಂಧಪಟ್ಟ ಇಲಾಖೆಗಳು ಜಿಬಿಎ ಜತೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಐದು ಪಾಲಿಕೆಗಳಿಗೆ ಸಮರ್ಪಕವಾದ ಆಡಳಿತ ಕಚೇರಿಗಳನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಆಯಾ ಕಾರ್ಪೊ ರೇಶನ್ಗಳು ತಮ್ಮ ಹಂತದಲ್ಲಿಯೇ ಕಸ ವಿಲೇವಾರಿ ಸಮರ್ಪಕವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಎಲ್ಲ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಕಸ ವಿಲೇವಾರಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಫುಟ್ಪಾತ್ಗಳು ಸಾಧ್ಯವಾದಷ್ಟು ವಿಸ್ತಾರವಾಗಿರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ. ಇದಕ್ಕೆ ಅವಕಾಶ ನೀಡಬಾರದು ಎಂದು ಅವರು ಸೂಚನೆ ನೀಡಿದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಇಲ್ಲಿ ಅವಕಾಶವಿದೆ. ಬೆಂಗಳೂರು ಅಭಿವೃದ್ಧಿಗೆ ವಿರೋಧವಿರುವವರು, ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧವಿರುವವರು ಈ ಸಭೆಯನ್ನು ಬಹಿಷ್ಕರಿಸಿದ್ದಾರೆ’
-ಸಿದ್ದರಾಮಯ್ಯ, ಮುಖ್ಯಮಂತ್ರಿ