×
Ad

ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೆ ಕರ್ನಾಟಕದಲ್ಲಿ: ಡಿ.ಕೆ.ಶಿವಕುಮಾರ್

Update: 2025-11-10 19:06 IST

ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೆ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ಹೊಸದಿಲ್ಲಿಯಲ್ಲಿರುವ ಎಐಸಿಸಿ ಕಚೇರಿಯ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಸಂಗ್ರಹಿಸಿರುವ 1.12 ಕೋಟಿ ಸಹಿಗಳನ್ನು ಸಂಗ್ರಹಿಸಲಾದ ದಾಖಲೆಗಳನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದ್ದೇವೆ ಎಂದು ಹೇಳಿದರು.

ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಎಐಸಿಸಿ ಸಂಶೋಧನಾ ವಿಭಾಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ಅವರು ವಿವರಿಸಿದರು.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಮುಖ್ಯಮಂತ್ರಿ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್‍ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಸತ್ಯಶೋಧನೆ ಮಾಡಿದವು. ಯಾವ ಸರಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೆ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು ಎಂದು ಅವರು ಹೇಳಿದರು.

ಕುಮಾರಸ್ವಾಮಿ ಭಯೋತ್ಪಾದಕರ ಒಂದು ಭಾಗವೇ?: ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಕುಮಾರಸ್ವಾಮಿ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ತಿರುಗೇಟು ನೀಡಿದರು.

ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ: ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೆ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಪೋಹಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News