224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸಲು ನಿರ್ದೇಶನ : ಡಿ.ಕೆ.ಶಿವಕುಮಾರ್
ಬೆಂಗಳೂರು, ನ.26: ‘ವರ್ಡ್ ಪವರ್ ಈಸ್ ವರಲ್ಡ್ ಪವರ್’ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಂಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಎದೆಯ ಮೇಲೆ ತ್ರಿವರ್ಣ ಧ್ವಜ, ಎದೆಯೊಳಗೆ ಸಂವಿಧಾನವಿದೆ ಎಂದರು.
100 ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿದರು. ಗಾಂಧೀಜಿ ಅವರ ನೇತೃತ್ವದ ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ 2024ರಲ್ಲಿ ಬೆಳಗಾವಿಯಲ್ಲಿ ನಾವು ಗಾಂಧಿ ಭಾರತ ಕಾರ್ಯಕ್ರಮ ಮಾಡಿದೆವು. ಆಗ ನಡೆಸಿದ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟು, ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಲೀಗಲ್ ಬ್ಯಾಂಕ್ :
ಮತಕಳ್ಳತನ ನಡೆಯುತ್ತಿರುವ ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಅದರಂತೆ ನಾನು ರಾಜ್ಯ ಕಾನೂನು ಘಟಕದ ಅಧ್ಯಕ್ಷ ಧನಂಜಯ ಅವರಿಗೆ ಆರು ತಿಂಗಳು ಕಾಲಾವಕಾಶ ನೀಡಿದ್ದು, 224 ಕ್ಷೇತ್ರಗಳಲ್ಲಿ ಕನಿಷ್ಠ 10 ವಕೀಲರಿರುವ ಲೀಗಲ್ ಬ್ಯಾಂಕ್ ಅನ್ನು ಸ್ಥಾಪಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ವಕೀಲರು ಏನೇ ವಾದ ಮಾಡಿದರೂ ಸಂವಿಧಾನ ಪುಸ್ತಕ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಮೇಲೆ ಮಂಡಿಸುತ್ತಾರೆ. ಇದೆಲ್ಲವನ್ನು ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಇದನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕಿದೆ. ಲೀಗಲ್ ಬ್ಯಾಂಕ್ನ ವಕೀಲರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಆಚಾರ ವಿಚಾರ ರಕ್ಷಣೆಗೆ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಾನೂನು ಘಟಕದವರಿಗೆ ಸೂಕ್ತ ಸ್ಥಾನ ಮಾನ ನೀಡಬೇಕು ಎಂಬ ಬೇಡಿಕೆಯನ್ನು ನಾನು ಒಪ್ಪುತ್ತೇನೆ. ಪಕ್ಷ ಇದ್ದರೆ ಸರಕಾರ, ಪಕ್ಷವೇ ಇಲ್ಲದಿದ್ದರೆ ಸರಕಾರ ಇಲ್ಲ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ನಾವು ಬಲಿಷ್ಠವಾಗಿರುತ್ತೇವೆ. ಕೆಪಿಸಿಸಿ ಆಸ್ತಿಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುವವರ ಪಟ್ಟಿಯನ್ನು ಕೊಡಿ. ಈ ಆಸ್ತಿಗಳನ್ನು ಕಾನೂನು ಸಮಿತಿಗೆ ಸೇರಿಸಲು ನಾನು ಸಿದ್ಧನಿದ್ದೇನೆ. ಆದರೆ, ಅವರು ಇದನ್ನು ಸೇವೆಯಂತೆ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ನಾನು ನನ್ನ ಇಲಾಖೆಗಳಲ್ಲಿರುವ ನ್ಯಾಯಾಲಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಿದೆ. ಸುಮಾರು 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಕೆಲವು ಪ್ರಕರಣಗಳಲ್ಲಿ ವಕೀಲರು ಅರ್ಜಿದಾರರ ಜೊತೆ ರಾಜಿ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯಲ್ಲಿ 10 ಲಕ್ಷ ಪರಿಹಾರ ನಿಗದಿಯಾಗಿದ್ದರೆ, ನ್ಯಾಯಾಲಯದಲ್ಲಿ ಅರ್ಜಿದಾರರಿಗೆ 8-10 ಕೋಟಿ ಪರಿಹಾರ ನೀಡುವಂತೆ ತೀರ್ಪು ಬರುವಂತೆ ಮಾಡಿದ್ದಾರೆ. ಈ ರೀತಿ ಆದರೆ ಸರಕಾರದ ಗತಿ ಏನು? ಈ ರೀತಿ ಕರ್ತವ್ಯ ಲೋಪ ಎಸಗಿದ ವಕೀಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗಳಲ್ಲಿ ನಮ್ಮ ಪರ ವಾದ ಮಾಡುವ ವಕೀಲರು ಮಂಡಿಸುವ ವಾದಗಳನ್ನು ದಾಖಲು ಮಾಡುವ ವ್ಯವಸ್ಥೆ ತರಲಾಗಿದೆ. ಈ ವಿಚಾರದಲ್ಲಿ ಜವಾಬ್ದಾರಿ ಹೊತ್ತುಕೊಳ್ಳದವರನ್ನು ಬದಲಿಸಬೇಕು ಎಂದು ಹೇಳಿದ್ದೇನೆ. ಸಂವಿಧಾನ ಬಳಸಿಕೊಂಡರೆ ನಾಯಕರಾಗಬಹುದು, ಮಾರಿಕೊಂಡರೆ ಗುಲಾಮರಾಗುತ್ತೀರಿ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಡಾ.ಜಿ.ಸಿ.ಚಂದ್ರಶೇಖರ್, ಶಾಸಕ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಮಾಜಿ ಸಚಿವ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ತೇಜಸ್ವಿನಿ, ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಸಲಹೆಗಾರ ದೀಪಕ್ ತಿಮ್ಮಯ, ಕಾನೂನು ಘಟಕದ ರಾಜ್ಯಾಧ್ಯಕ್ಷ ಧನಂಜಯ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜು ಚುನಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ..!
ನಮ್ಮ ಕಾಲದಲ್ಲಿ ವಿದ್ಯಾರ್ಥಿ ನಾಯಕತ್ವ ಬಲಿಷ್ಠವಾಗಿತ್ತು. ಈಗ ಅದು ಇಲ್ಲವಾಗಿದೆ. ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಅವರು ಪತ್ರ ಬರೆದು, ಕಾಲೇಜು ಚುನಾವಣೆ ಬಗ್ಗೆ ಆಲೋಚಿಸುವಂತೆ ಮಾರ್ಗದರ್ಶನ ನೀಡಿದ್ದಾರೆ. ಈ ಹಿಂದೆ ವಿದ್ಯಾರ್ಥಿ ಚುನಾವಣೆಗಳಲ್ಲಿ ಇದ್ದ ಅಪರಾಧ ಚಟುವಟಿಕೆ ನಿಯಂತ್ರಿಸಿ ಹೇಗೆ ಕಾಲೇಜು ಚುನಾವಣೆ ನಡೆಸಬಹುದು, ಇದರ ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗುವುದು. ಇದಕ್ಕಾಗಿ ಸಂವಿಧಾನದ 73 ಹಾಗೂ 74ನೇ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ನಮ್ಮ ಸಂವಿಧಾನ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಜಾತ್ಯಾತೀತತೆ, ಧರ್ಮ ಉಳಿಸಿಕೊಳ್ಳುವ ಹಕ್ಕನ್ನು ಕೊಟ್ಟಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಪೊನ್ನಣ್ಣಗೆ ಟಿಕೆಟ್ ನೀಡಬೇಡಿ ಎಂದಿದ್ದ ಬಿಜೆಪಿ ನಾಯಕ!
ರಾಜ್ಯ ಕಾನೂನು ಘಟಕಕ್ಕೆ ಎ.ಎಸ್.ಪೊನ್ನಣ್ಣ ಅವರನ್ನು ಆಯ್ಕೆ ಮಾಡುವಾಗ ಅನೇಕರು ಅವರ ತಂದೆ ಆರೆಸ್ಸೆಸ್ ಹಾಗೂ ಬಿಜೆಪಿ ಹಿನ್ನೆಲೆ ಹೊಂದಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು. ಎ.ಎಸ್.ಪೊನ್ನಣ್ಣನಿಗೆ ವಿಧಾನಸಭೆಗೆ ಟಿಕೆಟ್ ನೀಡಬೇಡಿ ಎಂದೂ ಬಿಜೆಪಿ ನಾಯಕರೊಬ್ಬರು ಕರೆ ಮಾಡಿ ಹೇಳಿದ್ದರು. ಆದರೆ, ನಾನು ಅವರು ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ಅವರು ಪಕ್ಷದ ಪರವಾಗಿ ಕೆಲಸ ಮಾಡಿದರು. ಈಗ ವಿರಾಜಪೇಟೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದಾರೆ. ಸರಕಾರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದಾರೆ. ಅನೇಕ ಕಾನೂನು ಸಂಕಟಗಳಲ್ಲಿ ನಮಗೆ ಸಹಾಯ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.