ಬಿಜೆಪಿ ಸರಕಾರದ ಅವಧಿಯಲ್ಲಿ ಹೊರಡಿಸಿದ ಆದೇಶ ಆರೆಸ್ಸೆಸ್ ಗೆ ಅನ್ವಯಿಸುವುದಿಲ್ಲವೇ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಶಾಲೆಗಳ ಆವರಣ/ಮೈದಾನ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸಬಾರದು ಎಂದು ಬಿಜೆಪಿ ಸರಕಾರವೇ 2013ರಲ್ಲಿ ಆದೇಶ ಹೊರಡಿಸಿದೆ. ಈ ಆದೇಶ ಆರೆಸ್ಸೆಸ್ ಗೆ ಅನ್ವಯಿಸುವುದಿಲ್ಲವೇ? ಆರೆಸ್ಸೆಸ್ ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಬಿಜೆಪಿ ಭಾವಿಸಿದೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಬಗ್ಗೆ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಸಚಿವರು, "ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರಕಾರ. ತನ್ನದೇ ಸರಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ರಾಜ್ಯ ಬಿಜೆಪಿಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರೆಸ್ಸೆಸ್ ಗೆ ಅನ್ವಯಿಸುವುದಿಲ್ಲವೇ?" ಪ್ರಶ್ನೆ ಮುಂದಿಟ್ಟಿದ್ದಾರೆ.
"ಆರೆಸ್ಸೆಸ್ ಸಂಘಟನೆಯು ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೆಪಿ? ಈ ಆದೇಶ ಜಾರಿಯಲ್ಲಿದ್ದರೂ ಆರೆಸ್ಸೆಸ್ ಎಂಬ ಸಂಘಟನೆಯು ಯಾವ ಅಂಜಿಕೆ ಇಲ್ಲದೆ ಶಾಲೆಗಳು ಹೆಡ್ಗೆವಾರ್ ಅವರ ವಂಶಸ್ಥರ ಆಸ್ತಿ ಎಂಬಂತಹ ಧೋರಣೆಯಲ್ಲಿ ತನ್ನ ಚಟುವಟಿಕೆ ನಡೆಸುತ್ತಿದೆ. ಕೂಗುಮಾರಿಗಳಂತೆ ಕೂಗುತ್ತಿರುವ ಬಿಜೆಪಿಯವರು ತಮ್ಮ ಸರಕಾರದ ಆದೇಶವನ್ನು ಒಮ್ಮೆ ಅವಲೋಕನ ಮಾಡಿ ನಂತರ ತಾವೇನು ಮಾತಾಡಬೇಕು ಎಂದು ನಿರ್ಧರಿಸಲಿ" ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.