ಒಳಮೀಸಲಾತಿ ವರದಿ ಸ್ವೀಕಾರ | ಆ.16ಕ್ಕೆ ವಿಶೇಷ ಸಂಪುಟ ಸಭೆ : ಕಾನೂನು ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ಮಾಡಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯನ್ನು ಸಚಿವ ಸಂಪುಟವು ಸ್ವೀಕರಿಸಿದೆ. ಈ ವಿಚಾರದ ಬಗ್ಗೆ ಆ.16ರಂದು ವಿಶೇಷ ಸಂಪುಟ ಸಭೆ ನಡೆಸಿ, ವರದಿ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾದ ಅಧ್ಯಯನ ಮಾಡುವ ಮೂಲಕ ಶೇ.95ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಆಯೋಗವು ವರದಿ ಸಲ್ಲಿಸಿದೆ ಎಂದು ಹೇಳಿದರು.
ಈ ವರದಿಯನ್ನು ಎಲ್ಲ ಸಚಿವರಿಗೆ ನೀಡಲಾಗಿದೆ. ಈ ಬಗ್ಗೆ ಅಧ್ಯಯನ ಮಾಡಿ ಆ.16 ರಂದು ಕರೆದಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಎಚ್.ಕೆ. ಪಾಟೀಲ್ ಹೇಳೀದರು.