×
Ad

ಜ.23ರಿಂದ ಮೂರು ದಿನಗಳ ಕಾಲ ಅಂತರ್‌ರಾಷ್ಟ್ರೀಯ ಸಿರಿಧಾನ್ಯ ವಾಣಿಜ್ಯ ಮೇಳ : ಸಚಿವ ಚಲುವರಾಯಸ್ವಾಮಿ

Update: 2025-01-20 22:00 IST

ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯ ಸರಕಾರವು ಜ.23 ರಿಂದ ಜ.25ರವರೆಗೆ ಇಲ್ಲಿನ ಅರಮನೆ ಮೈದಾನದಲ್ಲಿ ‘ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ-2025’ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಸೋಮವಾರ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. 2017ರಲ್ಲಿ ಆಯೋಜಿಸಿದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

ಜ.23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಳದ ಉದ್ಘಾಟನೆ ನೆರವೇರಿಸುವರು. ಈ ಮೇಳವು ರೈತರು, ರೈತ ಗುಂಪುಗಳು, ದೇಶಿಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಸಿ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರಕಾರದ ಧ್ಯೇಯವಾಗಿದೆ. ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಇಲ್ಲಿನ ಹೆಬ್ಬಾಳದಲ್ಲಿ ‘ಸಾವಯವ ಮತ್ತು ಸಿರಿಧಾನ್ಯ ಹಬ್’ ಅನ್ನು 20 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ ಅವರು ಅವರು ಹೇಳಿದರು.

ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು ರೂ.106 ಕೋಟಿ ಸಹಾಯಧನ ನೀಡಲಾಗಿದೆ. ಮೂರು ದಿನದ ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಹಾಗೂ 30ಕ್ಕಿಂತ ಹೆಚ್ಚು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ ಎಂದು ಎನ್.ಚೆಲುವರಾಯಸ್ವಾಮಿ ಹೇಳಿದರು.

ಈ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಜರ್ಮನಿ, ಸ್ವಿಟ್ಟರ್‍ಲ್ಯಾಂಡ್, ಸ್ಪೇನ್, ಆಸ್ಟ್ರೇಲಿಯ, ಕೀನ್ಯಾ ತಾಂಜೇನಿಯ, ಇಟಲಿ, ಇಂಗ್ಲೆಂಡ್, ಪೆರು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿ ಮೇಳದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದ್ದು, 25 ರಾಜ್ಯಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿವೆ. ಅಲ್ಲದೇ, 8 ಹೊರ ರಾಜ್ಯಗಳ ಕೃಷಿ ಸಚಿವರು ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಕೃಷಿ ಆಯುಕ್ತ ವೈ.ಎಸ್. ಪಾಟೀಲ, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News